Wednesday, October 9, 2013

MLA-MP'S offices under RTI?




   ಶಾಸಕರ- ಸಂಸದರ ಕಚೇರಿಗಳು ಮಾಹಿತಿ ಹಕ್ಕಿನ ವ್ಯಾಪ್ತಿಗೆ?

  ತಾವೇ ಚುನಾಯಿಸಿ ಕಳುಹಿಸಿರುವ ಶಾಸಕರು- ಸಂಸದರಿಗೆ ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ದೂರು ನೀಡುವ ಪ್ರಜೆಗಳು, ಇದೀಗ ತಮ್ಮ ದೂರಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಹಾಗೆಯೇ ಶಾಸಕರ- ಸಂಸದರ ಸ್ತಳೀಯ ಕ್ಷೇತ್ರಾಭಿವೃದ್ಧಿ ನಿಧಿಯನ್ನು ಯಾವ ಉದ್ದೇಶಗಳಿಗಾಗಿ ಹಾಗೂ ಎಲ್ಲಿ ಬಳಸಲಾಗಿದೆ ಇತ್ಯಾದಿ ಮಾಹಿತಿಗಳನ್ನು ಪಡೆದುಕೊಳ್ಳುವುದು ಸುಲಭವೂ ಹೌದು. 
------------              --------------                       -----------------                      ------------------                -------------------               -----

ರಾಜ್ಯದ- ದೇಶದ ಪ್ರಜೆಗಳು ಚುನಾಯಿಸಿದ ಶಾಸಕರು- ಸಂಸದರ ಕಚೇರಿಗಳು ಮಾಹಿತಿ ಪಡೆಯುವ ಹಕ್ಕು ಅಧಿನಿಯಮ ೨೦೦೫ ರ ಕಲಂ (೧) (ಎ)  ಮತ್ತು ೪ (೧) (ಬಿ ) ಗಳನ್ವಯ, ಈ ಕಾಯಿದೆಯ ವ್ಯಾಪ್ತಿಗೆ ಬರುತ್ತವೆಯೇ?, ಎನ್ನುವ ಪ್ರಶ್ನೆಗೆ ಉತ್ತರವನ್ನು ನೀಡಲು ರಾಜ್ಯ ಸರಕಾರದ ಇಲಾಖೆಯೊಂದು ೯ ತಿಂಗಳುಗಳ ಕಾಲಾವಧಿಯನ್ನು ಬಳಸಿದೆ. ಮಾಹಿತಿ ಹಕ್ಕು ಕಾಯಿದೆಯನ್ವಯ ಈ ನಿರ್ದಿಷ್ಟ ಮಾಹಿತಿಯನ್ನು ಕೋರಿದ್ದ ಪುತ್ತೂರಿನ ಬಳಕೆದಾರರ ಹಿತರಕ್ಷಣಾ ವೇದಿಕೆಯ ದಿನೇಶ್ ಭಟ್ ಇವರು, ಅಪೇಕ್ಷಿತ ಮಾಹಿತಿ ನಿಗದಿತ ಅವಧಿಯಲ್ಲಿ ದೊರೆಯದ ಕಾರಣದಿಂದಾಗಿ ಕರ್ನಾಟಕ ಮಾಹಿತಿ ಆಯೋಗಕ್ಕೆ ದೂರು ಸಲ್ಲಿಸಬೇಕಾಗಿ ಬಂದಿತ್ತು. 

ಸರಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ಜಾರಿಗೆ ತರುವ ಮೂಲಕ ದಕ್ಷತೆ ಮತ್ತು ಪ್ರಾಮಾಣಿಕತೆಗಳನ್ನು ಹೆಚ್ಚಿಸುವ ಸಲುವಾಗಿ ಅನುಷ್ಠಾನಗೊಂಡಿದ್ದ ಮಾ. ಹ. ಅ ೨೦೦೫, ಅಪೇಕ್ಷಿತ ಪರಿಣಾಮವನ್ನು ತೋರಲು ವಿಫಲವಾಗಿರಲು ಸರಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಔದಾಸೀನ್ಯತೆಗಳೇ ಕಾರಣವಾಗಿವೆ. ಅರ್ಜಿದಾರರು ಅಪೇಕ್ಷಿಸಿದ ಮಾಹಿತಿಯನ್ನು ನೀಡದಿರುವುದು, ನೀಡಲು ವಿಲಮ್ಬಿಸುವುದು ಹಾಗೂ ಯಾವುದೇ ಪ್ರತಿಕ್ರಿಯೆಯನ್ನೇ ತೋರದಿರುವ ಮೂಲಕ, ವಿವಿಧ ಸಾರ್ವಜನಿಕ ಪ್ರಾಧಿಕಾರಗಳ ಅಧಿಕಾರಿಗಳು ಈ ಕಾಯಿದೆಯ ಉದ್ದೇಶವನ್ನೇ ವಿಫಲಗೊಳಿಸುವ ಪ್ರಯತ್ನ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆದರೆ ಅನೇಕ ಸ್ವಯಂ ಸೇವಾ ಸಂಘಟನೆಗಳು ಮಾ. ಹ. ಅಧಿನಿಯಮದ ಬಗ್ಗೆ ಜನಸಾಮಾನ್ಯರಿಗೆ ಅವಶ್ಯಕ ಮಾಹಿತಿ, ಮಾರ್ಗದರ್ಶನ ಮತ್ತು ಬೆಂಬಲ ನೀಡುವ ಮೂಲಕ ಮತ್ತು ಅವಶ್ಯವೆನಿಸಿದಲ್ಲಿ ರಾಜ್ಯ ಮಾಹಿತಿ ಆಯೋಗಕ್ಕೆ ದೂರು ಸಲ್ಲಿಸುವ ಮೂಲಕ, ಜನರು ಅಪೇಕ್ಷಿಸುವ ಮಾಹಿತಿಗಳನ್ನು ಪಡೆದುಕೊಳ್ಳಲು ಸಫಲರಾಗುತ್ತಿದ್ದಾರೆ. ಕೆಲ ಸಂದರ್ಭಗಳಲ್ಲಿ ಇಂತಹ ಸಂಘಟನೆಗಳ ಕಾರ್ಯಕರ್ತರೂ, ಅಪೇಕ್ಷಿತ ಮಾಹಿತಿಯನ್ನು ಪಡೆದುಕೊಳ್ಳಲು ಹರಸಾಹಸವನ್ನೇ ನಡೆಸಬೇಕಾಗುತ್ತದೆ. ಇಂತಹ ಪ್ರಕರಣವೊಂದು ಇಂತಿದೆ. 

ನಮ್ಮನ್ನಾಳುವ ಶಾಸಕರು- ಸಂಸದರ ಕಚೇರಿಗಳು ಮಾ. ಹ. ಅ. ಕಾಯಿದೆಯ ವ್ಯಾಪ್ತಿಗೆ ಒಳಪಡುತ್ತವೆಯೇ ಎಂದು ದಿನೇಶ್ ಭಟ್ ಇವರು ೨೦೦೮ ರ ಜುಲೈ ೨೮ ರಂದು ಸಾರ್ವಜನಿಕ ಮಾಹಿತಿ ಅಧಿಕಾರಿ, ಪ್ರಧಾನ ಕಾರ್ಯದರ್ಶಿಯವರ ಕಚೇರಿ, ಕರ್ನಾಟಕ ಸಿಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಮಾ. ಹ. ಅ . ೨೦೦೫ ರಂತೆ ನಿಗದಿತ ಶುಲ್ಕದೊಂದಿಗೆ ಅರ್ಜಿಯನ್ನು ಸಲ್ಲಿಸಿದ್ದರು. 

ಈ ಅರ್ಜಿಯಲ್ಲಿ ವಿಧಾನ ಸಭೆ ಮತ್ತು ಲೋಕಸಭೆಯ ಚುನಾಯಿತ ಜನಪ್ರತಿನಿಧಿಗಳಿಗೆ, ರಾಜ್ಯ- ಕೇಂದ್ರ ಸರಕಾರಗಳಿಂದ ಕಚೇರಿ ಸೌಲಭ್ಯ, ಆಪ್ತ ಸಹಾಯಕರು, ದೂರವಾಣಿ, ವಾಹನಗಳು, ಕಚೇರಿಯ ನಿರ್ವಹಣಾ ವೆಚ್ಚ ಇತ್ಯಾದಿಗಳನ್ನು ಒದಗಿಸುವುದರಿಂದ, ಈ ಕಚೇರಿಗಳಿಗೆ ಮಾ. ಹ. ಕಾಯಿದೆ ಅನ್ವಯವಾಗುವುದೇ ಹಾಗೂ ಅನ್ವಯವಾಗುವುದಾದಲ್ಲಿ ಅಪೇಕ್ಷಿತ ಮಾಹಿತಿ ಪಡೆಯಲು ಅರ್ಜಿಯನ್ನು ಯಾರಿಗೆ ಹಾಗೂ ಯಾವರೀತಿಯಲ್ಲಿ ಸಲ್ಲಿಸಬೇಕು, ಮತ್ತು ನಿಗದಿತ ಶುಲ್ಕವನ್ನು ಯಾರ ಹೆಸರಿನಲ್ಲಿ ಪಾವತಿಸಬೇಕು (ನಮೂದಿಸಬೇಕು) ಎನ್ನುವ ಮಾಹಿತಿಗಳನ್ನು ನೀಡಬೇಕಾಗಿ ಕೋರಿದ್ದರು. 

ಆದರೆ ನಿಗದಿತ ೩೦ ದಿನಗಳ ಅವಧಿಯಲ್ಲಿ ಸಂಬಂಧಿತ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಪೇಕ್ಷಿತ ಮಾಹಿತಿಯನ್ನು ನೀಡದ್ದರಿಂದ, ೨೦೦೮ ರ ಸೆಪ್ಟೆಂಬರ್ ೬ ರಂದು ರಾಜ್ಯ ಮಾಹಿತಿ ಆಯೋಗಕ್ಕೆ ಈ ಬಗ್ಗೆ ದೂರನ್ನು ನೀಡಿದ್ದರು. ೨೦೦೮ ರ ಸೆಪ್ಟೆಂಬರ್ ೧೮ ರಂದು ಈ ದೂರನ್ನು ವಿಚಾರಣೆಗೆ ಎತ್ತಿಕೊಂಡ ಆಯೋಗವು, ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ನೀಡದ ಸಾ. ಮಾ. ಅಧಿಕಾರಿಗೆ ಯಾಕೆ ದಂಡವನ್ನು ವಿಧಿಸಬಾರದು ಎನ್ನುವ ಬಗ್ಗೆ ವಿವರಣೆ ನೀಡಲು ಮತ್ತು ೨೦೦೯ ರ ಜನವರಿ ೩೦ ರಂದು ಆಯೋಗದ ಮುಂದೆ ಹಾಜರಾಗುವಂತೆ ಮಧ್ಯಂತರ ಆದೇಶವನ್ನು ನೀಡಿತ್ತು. ಜೊತೆಗೆ ಈ ಮಾಹಿತಿಯನ್ನು ಬಹಿರಂಗಪಡಿಸಲು ಮಾ. ಹ. ಕಾಯಿದೆಯಲ್ಲಿ ವಿನಾಯತಿ ಹೊಂದಿಲ್ಲದಿದ್ದಲ್ಲಿ ಇದನ್ನು ತುರ್ತಾಗಿ ದಿನೇಶ್ ಭಟ್ ಇವರಿಗೆ ನೊಂದಾಯಿತ ಅಂಚೆಯ ಮೂಲಕ ಕಳುಹಿಸಿ, ಇದರ ಪ್ರತಿಯನ್ನು ಕಡ್ಡಾಯವಾಗಿ ಆಯೋಗಕ್ಕೆ ಕಳುಹಿಸುವಂತೆ ಆದೇಶಿಸಿತ್ತು. 

ಆದರೆ ಆಯೋಗದ ಆದೇಶದಂತೆ ಈ ಮಾಹಿತಿಯನ್ನು ನೀಡದ ಸಾ. ಮಾ. ಅಧಿಕಾರಿಯು ೨೦೦೯ ರ ಜನವರಿ ೩೦ ರಂದು ಆಯೋಗದ ಮುಂದೆ ವಿಚಾರಣೆಗೂ ಹಾಜರಾಗಿರಲಿಲ್ಲ. ಈ ಅಧಿಕಾರಿಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಆಯೋಗವು, ಈ ಅಧಿಕಾರಿಗೆ ಸೆಕ್ಷನ್ ೩೦ ಸಿ. ಪಿ. ಸಿ ಅನ್ವಯ ಸಮನ್ಸ್ ಜಾರಿಮಾಡಿ ೩೦ ದಿನಗಳ ಒಳಗಾಗಿ ಮಾಹಿತಿಯನ್ನು ಅರ್ಜಿದಾರರಿಗೆ ಉಚಿತವಾಗಿ ನೊಂದಾಯಿತ ಅಂಚೆಯ ಮೂಲಕ ರವಾನಿಸಿ, ಇದರ ಪ್ರತಿಯೊಂದನ್ನು ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನವನ್ನು ನೀಡುವಂತೆ ಇವರ ಮೇಲಧಿಕಾರಿಗೆ ಮಾ. ಹ. ಅ. ಕಲಂ ೧೯ (೮) (ಎ) ಯಂತೆ ಆದೇಶಿಸಿತ್ತು. ಇದರೊಂದಿಗೆ ಕಲಂ ೧೮ (೩) (ಎ) ಅನ್ವಯ ಅರ್ಜಿದಾರರು ಕೋರಿರುವ ಮಾಹಿತಿಗೆ ಸಂಬಂಧಿಸಿದ ಕಡತಗಳೊಂದಿಗೆ ೨೦೦೯ ರ ಮೇ ೧೩ ರಂದು ಆಯೋಗದ ಮುಂದೆ ಖುದ್ದಾಗಿ ಹಾಜರಾಗುವಂತೆ ಸಾ. ಮಾ. ಅಧಿಕಾರಿಗೆ ಆದೇಶಿಸಿತ್ತು. 

ಅಂತಿಮವಾಗಿ ತುಕ್ಕು ಹಿಡಿದಿದ್ದ ಸರಕಾರೀ ಯಂತ್ರವು ಮತ್ತೆ ಚಲಿಸಲು ಆರಂಭಿಸಿತ್ತು. ತತ್ಪರಿಣಾಮವಾಗಿ ಸರಕಾರದ ಪ್ರಧಾನ ಕಾರ್ಯದರ್ಶಿ, ಸಿಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಇವರು, ೨೦೦೯ ರ ಎಪ್ರಿಲ್ ೧೩ ರಂದು ದಿನೇಶ್ ಭಟ್ ಇವರು ಕೋರಿದ್ದ ಮಾಹಿತಿಯನ್ನು ಕಳುಹಿಸಿದ್ದರು. 

ಈ ಅಧಿಕಾರಿ ನೀಡಿರುವ ಮಾಹಿತಿಯಂತೆ ಮಾ. ಹ. ಕಾಯಿದೆಯ ಕಲಂ ೪ (೧) (ಎ) ಮತ್ತು ೪ (೧) (ಬಿ) ಗಳನ್ವಯ ವಿಧಾನಸಭೆಯ ಮತ್ತು ಲೋಕಸಭೆಯ ಚುನಾಯಿತ ಜನ ಪ್ರತಿನಿಧಿಗಳ ಕಚೇರಿಗಳು ಮಾ. ಹ. ಕಾಯಿದೆಗೆ ಒಳಪಡುತ್ತವೆ. ಅಪೇಕ್ಷಿತ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿಗಳು ಅವರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿಧಾನಸಭೆಯ ಮತ್ತು ಲೋಕಸಭೆಯ ಚುನಾಯಿತ ಜನ ಪ್ರತಿನಿಧಿಗಳಿಗೆ,ಕಚೇರಿ ಸೌಲಭ್ಯ, ಆಪ್ತ ಸಹಾಯಕರ ಸೌಲಭ್ಯ ಇತ್ಯಾದಿಗಳನ್ನು ಒದಗಿಸುವುದರಿಂದ, ಸಂಬಂಧಿಸಿದ ಜಿಲ್ಲಾಧಿಕಾರಿಗಳ ಕಛೇರಿಗಳಲ್ಲಿ ನೇಮಿಸಿರುವ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಅಪೇಕ್ಷಿತ ಮಾಹಿತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದಕ್ಕಾಗಿ ನಿಗದಿಸಿರುವ ಶುಲ್ಕವನ್ನು ಸಾ. ಮಾ. ಅಧಿಕಾರಿಗಳ ಹೆಸರಿನಲ್ಲಿ ಸಲ್ಲಿಸಬೇಕಾಗುತ್ತದೆ. 

ನಿಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಅಥವಾ ಅನ್ಯ ವ್ಯವಸ್ಥೆಗಳಿಗಾಗಿ ಶಾಸಕರ- ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ನೀಡಿರುವ ಅನುದಾನದ ಮತ್ತು ಇತರ ಮಾಹಿತಿಗಳನ್ನು ಪಡೆದುಕೊಳ್ಳಲು, ನೀವು ಇದೀಗ ಮಾಹಿತಿ ಪಡೆಯುವ ಹಕ್ಕು ಅಧಿನಿಯಮವನ್ನು ಬಳಸಿಕೊಳ್ಳಬಹುದಾಗಿದೆ. ಸರಕಾರವೇ ನೀಡಿರುವ ಈ ಹಕ್ಕನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವಿಫಲರಾದಲ್ಲಿ, ಕೋಟ್ಯಂತರ ರೂಪಾಯಿಗಳ ವೆಚ್ಚದಲ್ಲಿ ಅನುಷ್ಠಾನಗೊಳ್ಳುವ ಯೋಜನೆಗಳಲ್ಲಿ ಭ್ರಷ್ಟಾಚಾರದ ಪೆಡಂಭೂತ ನುಸುಳಲಿದೆ. 

ಡಾ. ಸಿ. ನಿತ್ಯಾನಂದ ಪೈ, ಪುತ್ತೂರು 

ಉದಯವಾಣಿ ಪತ್ರಿಕೆಯ ೦೭-೦೫-೨೦೦೯ ರ ಸಂಚಿಕೆಯ ಅಂಕಣದಲ್ಲಿ ಪ್ರಕಟಿತ ಲೇಖನ 

No comments:

Post a Comment