Wednesday, June 14, 2017

WORLD BLOOD DONORS DAY - JUN 14


                                   ಜೂನ್ 14 : ವಿಶ್ವ ರಕ್ತದಾನಿಗಳ ದಿನ
                            ಜೀವದಾನ ಎನಿಸಬಲ್ಲ ರಕ್ತದಾನ

ಬಹುತೇಕ ಜನರು ಧೃಢವಾಗಿ ನಂಬಿರುವಂತೆ ಕಾರಣಾಂತರಗಳಿಂದ ಪ್ರಾಣಾಪಾಯದ .ಸ್ಥಿತಿಯಲ್ಲಿರುವ ವ್ಯಕ್ತಿಯೊಬ್ಬರ ಜೀವವನ್ನು ಕೇವಲ ವೈದ್ಯರು ಮಾತ್ರ ಉಳಿಸಬಲ್ಲರು ಎನ್ನುವುದು ನಿಜವಲ್ಲ. ಇಂತಹ ವ್ಯಕ್ತಿಗಳ ಜೀವವನ್ನು ಉಳಿಸಲು ನಿಮ್ಮಿಂದಲೂ ಸಾಧ್ಯ ಎನ್ನುವ ವಿಚಾರವು ಪ್ರಾಯಶಃ ನಿಮಗೂ ತಿಳಿದಿರಲಾರದು. ನೀವು ಸ್ವಯಂಪ್ರೇರಿತವಾಗಿ ನೀಡುವ ಒಂದು ಯೂನಿಟ್ ರಕ್ತವು ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ವ್ಯಕ್ತಿಗಳ ಪ್ರಾಣವನ್ನು ಉಳಿಸಬಲ್ಲದು ಎನ್ನುವುದನ್ನು ಅರಿತಿರಿ. ಇದೇ ಉದ್ದೇಶಕ್ಕಾಗಿ ರಕ್ತದಾನ ಮಾಡಿ, ಈಗಲೇ ಮಾಡಿ ಮತ್ತು ಪದೇಪದೇ ಮಾಡುತ್ತಿರಿ.
-----------------------------------------------------------------------------------------------

ಆರೋಗ್ಯವಂತ ವ್ಯಕ್ತಿಯ ಶರೀರದಲ್ಲಿ ಸುಮಾರು ಐದರಿಂದ ಆರು ಲೀಟರ್ ಗಳಷ್ಟು ಪ್ರಮಾಣದ ರಕ್ತ ಇರುತ್ತದೆ. ಕೆಲವೊಂದು ಪೂರ್ವಯೋಜಿತ ವೈದ್ಯಕೀಯ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ಪ್ರಸವದ ಸಂದರ್ಭದಲ್ಲಿ ಮತ್ತು ಕಾರಣಾಂತರಗಳಿಂದ  ರಕ್ತ ಅಥವಾ ರಕ್ತದಲ್ಲಿರುವ ಘಟಕಗಳ ಪ್ರಮಾಣವು ಕಡಿಮೆಯಾದಾಗ, ಮನುಷ್ಯನ ಆರೋಗ್ಯ ಹದಗೆಡುವ ಅಥವಾ ಪ್ರಾಣಕ್ಕೆ ಸಂಚಕಾರ ಸಂಭವಿಸುವ ಸಾಧ್ಯತೆಗಳಿವೆ. ಇಂತಹ ಪರಿಸ್ಥಿತಿಯಲ್ಲಿ ತ್ವರಿತವಾಗಿ ಮತ್ತು ಸಂದರ್ಭೋಚಿತವಾಗಿ ಪೂರ್ಣ ರಕ್ತವನ್ನು ಅಥವಾ ರಕ್ತದ ಘಟಕಗಳನ್ನು ಮರುಪೂರಣ ಮಾಡುವ ಮೂಲಕ ರೋಗಿಯನ್ನು ಪ್ರಾಣಾಪಾಯದಿಂದ ಪಾರುಮಾಡಬಹುದಾಗಿದೆ. ಆದರೆ ಇಂತಹ ಸಂದರ್ಭಗಳಲ್ಲಿ ಅವಶ್ಯಕ ಪ್ರಮಾಣದ ಹಾಗೂ ಸುರಕ್ಷಿತ ರಕ್ತ ದೊರೆಯದೇ ಇದ್ದಲ್ಲಿ, ರೋಗಿಯು ಪ್ರಾಣಾಪಾಯಕ್ಕೆ ಈಡಾಗುವ ಹಾಗೂ ಮೃತಪಡುವ ಸಾಧ್ಯತೆಗಳು ಹೆಚ್ಚುತ್ತವೆ.

 ಪ್ರಸ್ತುತ ಜಾಗತಿಕ ಮಟ್ಟದಲ್ಲಿ ರಕ್ತದ ಬೇಡಿಕೆಯ ಪ್ರಮಾಣವು ಪೂರೈಕೆಯ ಪ್ರಮಾಣಕ್ಕಿಂತ ಸಾಕಷ್ಟು ಹೆಚ್ಚಿದೆ. ಜಾಗತಿಕ ಮಟ್ಟದಲ್ಲಿ ವಾರ್ಷಿಕ 108 ಮಿಲಿಯನ್ ಯೂನಿಟ್ ರಕ್ತ ಸಂಗ್ರಹವಾಗುತ್ತಿದೆ. ಪ್ರತಿಯೊಂದು ದೇಶದ ಶೇ 1 ರಷ್ಟು ಪ್ರಜೆಗಳು ನಿಯಮಿತವಾಗಿ ರಕ್ತದಾನ ಮಾಡುತ್ತಿದ್ದಲ್ಲಿ, ಆಯಾ ದೇಶದ ರಕ್ತದ ಬೇಡಿಕೆಯನ್ನು ಸುಲಭದಲ್ಲೇ ಪೂರೈಸಬಹುದಾಗಿದೆ. ಜಗತ್ತಿನ 62 ರಾಷ್ಟ್ರಗಳು ತಮ್ಮ ಬೇಡಿಕೆಯ ಶೇ. 100 ರಷ್ಟು ರಕ್ತವನ್ನು ಸ್ವಯಂಪ್ರೇರಿತವಾಗಿ ಮತ್ತು ಫಲಾಪೇಕ್ಷೆಯಿಲ್ಲದೇ ನೀಡುವ ದಾನಿಗಳಿಂದ ಸಂಗ್ರಹಿಸುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆಯು ಜಗತ್ತಿನ ಪ್ರತಿಯೊಂದು ರಾಷ್ಟ್ರಗಳೂ 2020 ಕ್ಕೆ ಮುನ್ನ ಸ್ವಯಂಪ್ರೇರಿತ ದಾನಿಗಳಿಂದಲೇ ಸಂಗ್ರಹಿಸುವ ಉದ್ದೇಶವನ್ನು ಹೊಂದಿದೆ. ನೀವು 18 ರಿಂದ 60 ವಯಸ್ಸಿನವರಾಗಿದ್ದು ಆರೋಗ್ಯವಂತರಾಗಿದ್ದಲ್ಲಿ, ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ನಮ್ಮ ದೇಶದಲ್ಲಿ ಕಂಡುಬರುತ್ತಿರುವ ರಕ್ತದ ಕೊರತೆಯನ್ನು ನೀಗಿಸಬಹುದಾಗಿದೆ. ತತ್ಪರಿಣಾಮವಾಗಿ ಅಸಂಖ್ಯ ರೋಗಿಗಳ ಪ್ರಾಣ ಉಳಿಸುವುದರೊಂದಿಗೆ, ಒಂದಿಷ್ಟು ಪುಣ್ಯವನ್ನೂ ಗಳಿಸಬಹುದಾಗಿದೆ!.  

ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನವನ್ನು ಜೂನ್   14, 2004 ರಂದು ಮೊತ್ತಮೊದಲಿಗೆ ಆಚರಿಸಲಾಗಿತ್ತು. ತದನಂತರ ಪ್ರಪಂಚದ ಪ್ರತಿಯೊಂದು ರಾಷ್ಟ್ರಗಳಲ್ಲಿ ಇದನ್ನು ವರ್ಷಂಪ್ರತಿ ಆಚರಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ, ಅಂತರ ರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆ, ರೆಡ್ ಕ್ರೆಸೆಂಟ್ ಸೊಸೈಟೀಸ್, ರಕ್ತದಾನಿಗಳ ಅಂತರ ರಾಷ್ಟ್ರೀಯ ಒಕ್ಕೂಟ ಮತ್ತು ಅಂತರ ರಾಷ್ಟ್ರೀಯ ರಕ್ತಪೂರಣ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ವಿಶ್ವಾದ್ಯಂತ ನಡೆಸಲಾಗುತ್ತದೆ.  ಈ ಸಂದರ್ಭದಲ್ಲಿ ರಕ್ತದಾನದ ಮಹತ್ವ ಹಾಗೂ ಅವಶ್ಯಕತೆ, ಸುರಕ್ಷಿತ ರಕ್ತ ಹಾಗೂ ರಕ್ತದ ಉತ್ಪನ್ನಗಳು ಮತ್ತು ಪ್ರತಿಫಲಾಪೇಕ್ಷೆ ಇಲ್ಲದೇ ಸ್ವಯಂಪ್ರೇರಿತ ರಕ್ತದಾನ ಮಾಡುವ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳೊಂದಿಗೆ ವಿಶೇಷ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಅಂತೆಯೇ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಅಸಂಖ್ಯ ಜನರ ಪ್ರಾಣಗಳನ್ನು ಉಳಿಸಿರುವ ರಕ್ತದಾನಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಲಾಗುತ್ತದೆ.

ಕಾರ್ಲ್ ಲ್ಯಾಂಡ್ ಸ್ಟೈನರ್ ನಾಮಾಂಕಿತ ವೈದ್ಯ ಹಾಗೂ ಬಯಾಲಜಿಸ್ಟ್ ಇವರ ಜನ್ಮದಿನವನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಆಧುನಿಕ ರಕ್ತಪೂರಣ ವಿಧಾನದ ಅನ್ವೇಷಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದ ಈ ವೈದ್ಯರು, 1901 ರಲ್ಲಿ ಮನುಷ್ಯನ ರಕ್ತದ ಎ, ಬಿ ಮತ್ತು ಓ ಗುಂಪುಗಳನ್ನು ಪತ್ತೆಹಚ್ಚಿದ ಮತ್ತು ಆಧುನಿಕ ಪದ್ದತಿಯ ಪ್ರಭೇದಗಳನ್ನು ಅಭಿವೃದ್ಧಿಪಡಿಸಿದ ಸಂಶೋಧಕರೂ ಹೌದು. 1937 ರಲ್ಲಿ ಅಲೆಕ್ಸಾಂಡರ್ ವೈನರ್ ಎನ್ನುವ ಸಹ ಸಂಶೋಧಕರೊಂದಿಗೆ “ ರೀಸಸ್ ಫ್ಯಾಕ್ಟರ್ “ ಎನ್ನುವ ಅಂಶವನ್ನು ಗುರುತಿಸುವ ಮೂಲಕ, ರಕ್ತವನ್ನು ಪಡೆಯುವ ರೋಗಿಗಳ ಪ್ರಾಣಕ್ಕೆ ಯಾವುದೇ ಅಪಾಯ ಸಂಭವಿಸದಂತೆ ರಕ್ತವನ್ನು ಪೂರಣ ಮಾಡಲು ಇವರು ಕಾರಣಕರ್ತರೆನಿಸಿದ್ದರು.

ಈ ವೈದ್ಯರ ಅಸಾಧಾರಣ ಸಾಧನೆ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಲ್ಲಿಸಿದ್ದ ಕೊಡುಗೆಯನ್ನು ಪರಿಗಣಿಸಿ, ಇವರ ಜನ್ಮದಿನವನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ.

ನಿಮಗಿದು ತಿಳಿದಿರಲಿ

ಪೂರ್ವಯೋಜಿತ ವೈದ್ಯಕೀಯ ಚಿಕಿತ್ಸೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರಕ್ತವು ಪ್ರಮುಖ ಸಾಧನ ಸಂಪತ್ತು ಎನಿಸುತ್ತದೆ. ಅಂತೆಯೇ ರಕ್ತವು ಗಂಬೀರ ಸ್ಥಿತಿಯಲ್ಲಿರುವ ವ್ಯಕ್ತಿಗಳ ಜೀವಿತಾವಧಿಯನ್ನು ವೃದ್ಧಿಸುವುದರೊಂದಿಗೆ, ಇವರ ಆರೋಗ್ಯ ಮತ್ತು ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಇದಲ್ಲದೇ ಶಸ್ತ್ರಚಿಕಿತ್ಸೆ ಹಾಗೂ ಸಂಕೀರ್ಣ ವೈದ್ಯಕೀಯ ಚಿಕಿತ್ಸೆಗಳಲ್ಲಿ ಅತ್ಯಂತ ಉಪಯುಕ್ತವೆನಿಸುತ್ತದೆ. ಇದಲ್ಲದೇ ಪ್ರಾಕೃತಿಕ ವಿಕೋಪ, ರಸ್ತೆ ಮತ್ತಿತರ ಅಪಘಾತಗಳು, ಭಯೋತ್ಪಾದಕ ಕೃತ್ಯಗಳು ಮತ್ತು ಯುದ್ಧ ಇತ್ಯಾದಿ ಸಂದರ್ಭಗಳಲ್ಲಿ ರಕ್ತವು ಜೀವರಕ್ಷಕ ಎನಿಸುತ್ತದೆ. ಆದರೆ ಇಂತಹ ಪರಿಸ್ಥಿತಿಗಳನ್ನು ವೈದ್ಯರು ಸಮರ್ಥವಾಗಿ ನಿಭಾಯಿಸಲು ಸುರಕ್ಷಿತ ಹಾಗೂ ಅವಶ್ಯಕ ಪ್ರಮಾಣದ ರಕ್ತದ ಪೂರೈಕೆ ಅನಿವಾರ್ಯವೆನಿಸುತ್ತದೆ. ಇದಕ್ಕಾಗಿ ಸರ್ಕಾರಿ ಮತ್ತು ಸ್ವಯಂಸೇವಾ ಸಂಘಟನೆಗಳು ನಡೆಸುವ ರಕ್ತನಿಧಿ ( ಬ್ಲಡ್ ಬ್ಯಾಂಕ್ ) ಗಳಲ್ಲಿ ಅವಶ್ಯಕ ಸೌಲಭ್ಯಗಳೊಂದಿಗೆ ಪ್ರತಿಫಲಾಪೇಕ್ಷೆ ಇಲ್ಲದೇ ಸ್ವಯಂಪ್ರೇರಿತ ರಕ್ತದಾನ ಮಾಡುವ ದಾನಿಗಳ ಸಹಕಾರದ ಅವಶ್ಯಕತೆಯಿದೆ. ಆರೋಗ್ಯವಂತ ವ್ಯಕ್ತಿಯೊಬ್ಬನು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಅನೇಕ ಜನರ ಪ್ರಾಣಗಳನ್ನು ಉಳಿಸುವುದರೊಂದಿಗೆ, ಇಂತಹ ದಾನಿಗಳು ತಮ್ಮ ವೈಯುಕ್ತಿಕ ಆರೋಗ್ಯದ ಮಟ್ಟವನ್ನೂ ಉನ್ನತಸ್ತರದಲ್ಲಿ ಕಾಪಾಡಿಕೊಳ್ಳಬಹುದಾಗಿದೆ.

ಬೇಡಿಕೆ – ಪೂರೈಕೆ

ಭಾರತದ ಜನಸಂಖ್ಯೆಯು 125 ಕೋಟಿಯನ್ನು ಮೀರಿದ್ದು, ದೇಶದಲ್ಲಿ ರಕ್ತದ ಬೇಡಿಕೆಯ ಪ್ರಮಾಣವು ವಾರ್ಷಿಕ ಸುಮಾರು 5 ಕೋಟಿ ಯೂನಿಟ್ ಆಗಿದೆ. ಆದರೆ ರಕ್ತದ ಪೂರೈಕೆಯ ಪ್ರಮಾಣವು ಕೇವಲ ೨. ೫ ಕೋಟಿ ಯೂನಿಟ್ ಎಂದಲ್ಲಿ ನೀವೂ ನಂಬಲಾರಿರಿ. ಇದಕ್ಕೂ ಮಿಗಿಲಾಗಿ ಸೂಕ್ತ ಸಮಯದಲ್ಲಿ ಸುರಕ್ಷಿತ ಮತ್ತು ಅವಶ್ಯಕ ಪ್ರಮಾಣದ ರಕ್ತ ಲಭ್ಯವಾಗದ ಕಾರಣದಿಂದಾಗಿ ಅನೇಕ ರೋಗಿಗಳು ಮೃತಪಡುತ್ತಾರೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸಬೇಕಿದ್ದಲ್ಲಿ ನಮ್ಮ ದೇಶದ ಯುವಜನತೆ ನಿಯಮಿತವಾಗಿ ಹಾಗೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಬೇಕಿದೆ. ಅರ್ಥಾತ್, ಈ ವರ್ಷದ ವಿಶ್ವ ರಕ್ತದಾನಿಗಳ ದಿನದ ಘೋಷ ವಾಕ್ಯವಾದ “ ರಕ್ತದಾನ ಮಾಡಿ, ಈಗಲೇ ಮಾಡಿ, ಪದೇಪದೇ ಮಾಡಿ “ ಎನ್ನುವುದನ್ನು ಅಕ್ಷರಶಃ ಪರಿಪಾಲಿಸಬೇಕಿದೆ.

ಡಾ. ಸಿ. ನಿತ್ಯಾನಂದ ಪೈ,
ಬಳಕೆದಾರರ ಹಿತರಕ್ಷಣಾ ವೇದಿಕೆ, ಪುತ್ತೂರು





                  

Thursday, March 2, 2017

ROAD SAFETY WEEK - NEW RULES


                      ವರ್ಷವಿಡೀ ನಡೆಯುತ್ತಿರಲಿ ರಸ್ತೆ ಸುರಕ್ಷಾ ಸಪ್ತಾಹ


ನಮ್ಮ ದೇಶದ ಪ್ರಜೆಗಳು ನೆಮ್ಮದಿಯಿಂದ ಜೀವಿಸಲು ಉಪಯುಕ್ತವೆನಿಸಬಲ್ಲ ನೂರಾರು ಕಾನೂನು ಮತ್ತು ನೀತಿನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿವೆ. ಆದರೆ ಇವುಗಳನ್ನು ಅನುಷ್ಠಾನಗೊಳಿಸುವಲ್ಲಿ ತತ್ಸಂಬಂಧಿತ ಅಧಿಕಾರಿಗಳು ವಿಫಲರಾಗಿರುವುದು ನಿಮಗೂ ತಿಳಿದಿರಲೇಬೇಕು. ರಸ್ತೆ ಸುರಕ್ಷಾ ಸಪ್ತಾಹದ ಆಚರಣೆಯು ಇದಕ್ಕೊಂದು ಉತ್ತಮ ಉದಾಹರಣೆ ಎನಿಸುತ್ತದೆ. ಈ ಸಪ್ತಾಹದ ಸಂದರ್ಭದಲ್ಲಿ ಸಾರಿಗೆ ಇಲಾಖೆ  ಮತ್ತು ಸಂಚಾರಿ ಆರಕ್ಷಕರು ತೋರುವ ಕ್ರಿಯಾಶೀಲತೆಯನ್ನು ಇನ್ನುಳಿದ ದಿನಗಳಲ್ಲೂ ತೋರಿದಲ್ಲಿ, ದೇಶದಲ್ಲಿ ಸಂಭವಿಸುವ ರಸ್ತೆ ಅಪಘಾತಗಳು ಹಾಗೂ ಶಾಶ್ವತ ಅಂಗವೈಕಲ್ಯಕ್ಕೆ ಈಡಾಗುವವರು ಮತ್ತು ಇವುಗಳಿಗೆ  ಬಲಿಯಾಗುವವರ ಸಂಖ್ಯೆ ನಿಶ್ಚಿತವಾಗಿಯೂ ಕಡಿಮೆಯಾಗುವುದರಲ್ಲಿ ಸಂದೇಹವಿಲ್ಲ.

ರಸ್ತೆ ಸುರಕ್ಷಾ ಸಪ್ತಾಹ

ಕಳೆದ ೨೮ ವರ್ಷಗಳಿಂದ ನಮ್ಮ ದೇಶದ ಪ್ರತಿಯೊಂದು ರಾಜ್ಯಗಳಲ್ಲಿ ಜನವರಿ ತಿಂಗಳಿನಲ್ಲಿ ರಸ್ತೆ ಸುರಕ್ಷಾ ಸಪ್ತಾಹವನ್ನು ಆಚರಿಸಲಾಗುತ್ತಿದೆ, ಈ ಕಾರ್ಯಕ್ರಮದಲ್ಲಿ ಸಂಚಾರ ವಿಭಾಗದ ಆರಕ್ಷಕರು, ಸಾರಿಗೆ ಇಲಾಖೆಗಳೊಂದಿಗೆ, ಅನೇಕ ಸ್ವಯಂಸೇವಾ ಸಂಘಟನೆಗಳು ಭಾಗಿಯಾಗುತ್ತವೆ. ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ಶಾಲಾಕಾಲೇಜುಗಳ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸುಮಾರು ಮೂರು ದಶಕಗಳಿಂದ ಈ ಕಾರ್ಯಕ್ರಮ ಜರಗುತ್ತಿದ್ದರೂ, ನಮ್ಮ ದೇಶದಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಇವುಗಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ನಮ್ಮ ಇಚ್ಛಾಶಕ್ತಿಯ ಕೊರತೆಯನ್ನು ತೋರುತ್ತದೆ.

ರಸ್ತೆ ಸುರಕ್ಷಾ ಸಪ್ತಾಹದ ಸಂದರ್ಭದಲ್ಲಿ ಬಹುತೇಕ ನಗರ ಮತ್ತು ಪಟ್ಟಣಗಳಲ್ಲಿ ಬ್ಯಾನರ್ ಗಳನ್ನೂ ಅಳವಡಿಸುವ ಹಾಗೂ ಕರಪತ್ರಗಳನ್ನು ಮುದ್ರಿಸಿ ಹಂಚುವ ಮೂಲಕ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸಲಾಗುವುದಾದರೂ, ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅನುಷ್ಠಾನಿಸಬೇಕಾದ ಅನೇಕ ವಿಚಾರಗಳನ್ನು ಅನುಕೂಲಕರವಾಗಿ ಮರೆತುಬಿಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಆಹ್ವಾನಿತ ಗಣ್ಯರು, ಅದರಲ್ಲೂ ರಾಜಕೀಯ ನೇತಾರರು  ಸಾಮಾನ್ಯವಾಗಿ ಸಾರಿಗೆ ನಿಯಮಗಳನ್ನು ಪರಿಪಾಲಿಸಬೇಕಾದ ಮತ್ತು ಜನಸಾಮಾನ್ಯರಲ್ಲಿ ಈ ಬಗ್ಗೆ ಅರಿವು ಮೂಡಿಸುವ, ಅಪಘಾತಗಳನ್ನು ತಡೆಗಟ್ಟುವ ಮತ್ತು ಇದರಿಂದಾಗಿ ಸಂಭವಿಸುತ್ತಿರುವ ಮರಣಗಳ ಪ್ರಮಾಣವನ್ನು ನಿಯಂತ್ರಿಸುವ ಬಗ್ಗೆ ಭಾಷಣಗಳನ್ನು ಬಿಗಿಯುತ್ತಾರೆ. ಆದರೆ ತಾವು ಸರ್ಕಾರಿ ವಾಹನಗಳಲ್ಲಿ ಸಂಚರಿಸುವಾಗ ಇವೆಲ್ಲಾ ನಿಯಮಗಳನ್ನು ಗಾಳಿಗೆ ತೂರುತ್ತಾರೆ ಎನ್ನುವುದು ದೇಶದ ಪ್ರಜೆಗಳಿಗೆ ತಿಳಿಯದ ವಿಚಾರವೇನಲ್ಲ.

ರಸ್ತೆ ಅಪಘಾತಗಳ ರಾಜಧಾನಿ

ಭಾರತವು ವಿಶ್ವದ ರಸ್ತೆ ಅಪಘಾತಗಳ ರಾಜಧಾನಿ ಎನಿಸಿದ್ದ ಚೀನಾ ದೇಶವನ್ನು ಪದಚ್ಯುತಗೊಳಿಸಿ, ಅಗ್ರಸ್ಥಾನವನ್ನು ಅಲಂಕರಿಸಿ ಕೆಲವರ್ಷಗಳೇ ಕಳೆದಿವೆ. ಇದಕ್ಕೆ ಸಾಕಷ್ಟು ಸಮರ್ಥನೀಯ ಕಾರಣಗಳೂ ಇವೆ. ನಮ್ಮ ದೇಶದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ಸಂಖ್ಯೆ ಅತ್ಯಧಿಕವಾಗಿರುವುದರೊಂದಿಗೆ, ಇವುಗಳಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಅತ್ಯಧಿಕವಾಗಿರುವುದು ಪ್ರಮುಖ ಕಾರಣವೆನಿಸಿದೆ. ೨೦೧೪ ರ ಅಂಕಿ ಅಂಶಗಳಂತೆ ನಮ್ಮ ದೇಶದಲ್ಲಿ ಪ್ರತಿ ಗಂಟೆಗೆ ೨೦ ಕ್ಕೂ ಅಧಿಕ ಜನರು ರಸ್ತೆ ಅಪಘಾತಗಳಿಂದ ಮೃತಪಡುತ್ತಾರೆ. ಅರ್ಥಾತ್, ಒಂದು ವರ್ಷದಲ್ಲಿ ಸುಮಾರು ೧,೪೦,೦೦೦ ಜನರು ರಸ್ತೆ ಅಪಘಾತಗಳಲ್ಲಿ ಮೃತಪಡುವುದರೊಂದಿಗೆ, ಇದಕ್ಕೂ ಅಧಿಕ ಸಂಖ್ಯೆಯ ಜನರು ಶಾಶ್ವತ ಅಂಗವೈಕಲ್ಯಗಳಿಗೆ ಈಡಾಗುತ್ತಾರೆ.

ವಿಶ್ವ ಆರೋಗ್ಯ ಸಂಸ್ಥೆಯ ವರದಿಯೊಂದರಂತೆ ಭಾರತದಲ್ಲಿ ಸಂಭವಿಸುವ ದ್ವಿಚಕ್ರ ವಾಹನಗಳ ಅಪಘಾತಗಳಲ್ಲಿ ಮರಣದ ಪ್ರಮಾಣವು ಶೇ. ೨ ಕ್ಕೂ ಅಧಿಕವಿದ್ದು, ಇದು ಜಗತ್ತಿನಲ್ಲೇ ಅತ್ಯಧಿಕವೆನಿಸಿದೆ. ಇದೇ ವರದಿಯಲ್ಲಿ ಉಲ್ಲೇಖಿಸಿರುವಂತೆ, ನಮ್ಮ ದೇಶದಲ್ಲಿ ಕೇವಲ ಶೇ. ೫೦ ರಷ್ಟು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿದಲ್ಲಿ, ಶೇ. ೧೦ ರಷ್ಟು ಲಘು ವಾಹನಗಳ ಸವಾರರು ಸೀಟ್ ಬೆಲ್ಟ್ ಧರಿಸುತ್ತಾರೆ!. ರಸ್ತೆ ಅಪಘಾತಗಳಲ್ಲಿ ಮರಣದ ಪ್ರಮಾಣವು ಹೆಚ್ಚಲು ಇದೊಂದು ಪ್ರಮುಖ ಕಾರಣವೂ ಹೌದು.

ಅಂತೆಯೇ,  ಅತಿವೇಗದ ಚಾಲನೆ, ಮದ್ಯ ಅಥವಾ ಅನ್ಯ ಅಮಲು ಪದಾರ್ಥ ಸೇವಿಸಿವಾಹನ ಚಲಾಯಿಸುವುದು, ವಾಹನ ಚಾಲನೆಯಲ್ಲಿ ಪರಿಣತಿ ಇಲ್ಲದಿದ್ದರೂ ವಾಹನ ಚಲಾಯಿಸುವುದು, ಸಾರಿಗೆ ನಿಯಮಗಳನ್ನು ಉಲ್ಲಂಘಿಸುವುದು, ದ್ವಿಚಕ್ರ ವಾಹನದಲ್ಲಿ ಮೂರು ಅಥವಾ ನಾಲ್ಕು ಮಂದಿ ಪ್ರಯಾಣಿಸುವುದು, ಇತರ ವರ್ಗದ ವಾಹನಗಳಲ್ಲೂ ನಿಗದಿತ ಸಂಖ್ಯೆಗಿಂತ ಅಧಿಕ ಜನರನ್ನು ತುಂಬಿಸುವುದು, ಸರಕು ಸಾಗಾಟದ ವಾಹನಗಳಲ್ಲಿ ಜನರನ್ನು ಕೊಂಡೊಯ್ಯುವುದು, ಕಣ್ಣು ಕೋರೈಸುವ ದೀಪಗಳನ್ನು ಬೆಳಗಿಸಿ ವಾಹನ ಚಲಾಯಿಸುವುದು, ದುಸ್ಥಿತಿಯಲ್ಲಿರುವ ರಸ್ತೆಗಳು, ಅಲೆಮಾರಿ ಜಾನುವಾರುಗಳ ಹಾವಳಿ, ವೃತ್ತಿಪರ ಚಾಲಕರು ಸಾಕಷ್ಟು ವಿಶ್ರಾಂತಿ ಪಡೆಯದೇ ವಾಹನ ಚಲಾಯಿಸುವುದು, ಯಾವುದೇ ಸೂಚನೆಯನ್ನು ನೀಡದೆ ಥಟ್ಟನೇ ವಾಹನಗಳನ್ನು ನಿಲ್ಲಿಸುವುದು ಅಥವಾ ತಿರುಗಿಸುವುದು, ದೃಷ್ಠಿದೋಷವಿರುವ ಚಾಲಕರು ಇದನ್ನು ಸರಿಪಡಿಸಿಕೊಳ್ಳದೇ ವಾಹನ ಚಲಾಯಿಸುವುದು ಮತ್ತು ಅನಿಯಂತ್ರಿತವಾಗಿ ಹೆಚ್ಚುತ್ತಲೇ ಇರುವ ವಾಹನಗಳ ಸಂಖ್ಯೆಗಳಿಂದಾಗಿ, ರಸ್ತೆ ಅಪಘಾತಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

ನಿಯಂತ್ರಿಸುವುದೆಂತು?

ವಾಹನ ಚಾಲನಾ ಪರವಾನಿಗೆಯನ್ನು ನೀಡುವ ಮುನ್ನ ಚಾಲಕರನ್ನು ಕಟ್ಟುನಿಟ್ಟಿನ ಪರೀಕ್ಷೆಗೆ ಒಳಪಡಿಸುವುದು, ಪ್ರತಿಯೊಂದು ನಗರ ಹಾಗೂ ಪಟ್ಟಣಗಳಲ್ಲಿನ ಸಂಚಾರಿ ಆರಕ್ಷಕರಿಂದ ವರ್ಷವಿಡೀ ನಿಯಮಿತವಾಗಿ ವಾಹನಗಳ ಮತ್ತು ಇವುಗಳ ಚಾಲಕರ ದಾಖಲೆಗಳನ್ನು ತಪಾಸಣೆಯನ್ನು ಮಾಡಿಸುವ ಮೂಲಕ, ಪರವಾನಿಗೆ ಇಲ್ಲದೇ ಅಥವಾ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವ ಚಾಲಕರನ್ನು ಪತ್ತೆಹಚ್ಚಿ ಸೂಕ್ತ ಕಾನೂನುಕ್ರಮ ಜರಗಿಸಬೇಕು. ಗಂಭೀರ ಸ್ವರೂಪದ ಮತ್ತು ಸಾವುನೋವುಗಳಿಗೆ ಕಾರಣವೆನಿಸುವ ಅಪಘಾತಗಳ ಬಗ್ಗೆ ವೈಜ್ಞಾನಿಕ ವಿಶ್ಲೇಷಣೆ ನಡೆಸಿ, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಇದೇ ರೀತಿಯಲ್ಲಿ ಅಪಘಾತ ಮತ್ತು ಅಮಾಯಕರ ಅಕಾಲಿಕ ಮರಣಗಳಿಗೆ ಕಾರಣವೆನಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅತಿವೇಗದ ಚಾಲನೆ, ಅವೈಜ್ಞಾನಿಕ ರಸ್ತೆ ಉಬ್ಬುಗಳು, ಅಪ್ರಾಪ್ತರು ವಾಹನ ಚಲಾಯಿಸುವುದು, ರಸ್ತೆಗಳ ದುಸ್ಥಿತಿ ಮತ್ತಿತರ ಸಮಸ್ಯೆಗಳನ್ನು ಪರಿಹರಿಸುವುದೇ ಮುಂತಾದ ಕ್ರಮಗಳನ್ನು ತತ್ಸಂಬಂಧಿತ ಇಲಾಖೆಗಳು ಕೈಗೊಳ್ಳಬೇಕು. ಇದರೊಂದಿಗೆ  ಪ್ರತಿಯೊಬ್ಬ ವಾಹನಗಳ ಚಾಲಕರು ಸಂಚಾರ ನಿಯಮಗಳನ್ನು ತಪ್ಪದೆ ಪರಿಪಾಲಿಸಿದಲ್ಲಿ, ಭಾರತವನ್ನು ರಸ್ತೆ ಅಪಘಾತಗಳ ರಾಜಧಾನಿ  ಎನ್ನುವ ಪಟ್ಟದಿಂದ ಕೆಳಗಿಳಿಸುವುದು ಅಸಾಧ್ಯವೇನಲ್ಲ.

ತಾಜಾ ಸುದ್ದಿ

ಈ ಲೇಖನವನ್ನು ಬರೆದು ಮುಗಿಸುವಷ್ಟರಲ್ಲಿ ವಾಟ್ಸಾಪ್            ನಲ್ಲಿ ಬಂದ ಸಂದೇಶದಂತೆ, ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ನಿಯಮಗಳು ಈ ಕೆಳಗಿನಂತಿವೆ.

ಫೆಬ್ರವರಿ ೨೧ ರಂದು ರಾಜ್ಯ ಸಭೆಯು ಮೋಟಾರು ವಾಹನಗಳ ( ತಿದ್ದುಪಡಿ ) ಕಾಯಿದೆ ೨೦೧೬ ನ್ನು ಅಂಗೀಕರಿಸಿದ್ದು, ಇದು ಇದೇ ತಿಂಗಳಿನ ೧ ನೇ ತಾರೀಕಿನಿಂದ ಜಾರಿಗೊಂಡಿದೆ. ನೂತನ ನಿಯಮಗಳಂತೆ ವಾಹನವನ್ನು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸದಿದ್ದಲ್ಲಿ ರೂ ೧೦೦೦, ವಾಹನದ ವಿಮಾ ದಾಖಲೆ ಇಲ್ಲದಿದ್ದಲ್ಲಿ ರೂ ೧,೫೦೦, ನೋಂದಣಿ ಮತ್ತು ಅನ್ಯ ದಾಖಲೆಗಳು ಇಲ್ಲದಿದ್ದಲ್ಲಿ ರೂ ೫,೦೦೦ ಹಾಗೂ ವಾಹನವನ್ನು ಮುಟ್ಟುಗೋಲು ಹಾಕುವುದುಮತ್ತು ಚಾಲನಾ ಪರವಾನಿಗೆ ಇಲ್ಲದಿದ್ದಲ್ಲಿ ರೂ ೧೦,೦೦೦ ದಂಡವನ್ನು ವಿಧಿಸಲಾಗುವುದು.ವಾಹನವನ್ನು ಚಲಾಯಿಸುವಾಗ  ಮೊಬೈಲ್ ಬಳಸಿದಲ್ಲಿ ರೂ ೫೦೦೦, ಮದ್ಯ ಸೇವಿಸಿ ವಾಹನ ಚಲಾಯಿಸಿದಲ್ಲಿ ರೂ ೨೫,೦೦೦ ಹಾಗೂ ಇದನ್ನು ಮೂರುಬಾರಿ ಪುನರಾವರ್ತಿಸಿದಲ್ಲಿ ವಾಹನ ಚಾಲನಾ ಪರವಾನಿಗೆ ಮುಟ್ಟುಗೋಲು ಹಾಕುವುದು ಮತ್ತು ವಾಹನದ ಪ್ರದೂಷಣೆಯ ಪ್ರಮಾಣ ಪತ್ರ ಇರದಿದ್ದಲ್ಲಿ ರೂ ೧,೫೦೦ ದಂಡವನ್ನು ತೆರಬೇಕಾಗುವುದು. ಇಂತಹ ತಪ್ಪುಗಳನ್ನು ಮೂರುಬಾರಿ ಪುನರಾವರ್ತಿಸಿದಲ್ಲಿ ವಾಹನ ಚಾಲನಾ ಪರವಾನಿಗೆಯನ್ನು ರದ್ದುಪಡಿಸುವಂತಹ  ಕಠಿಣ ಕ್ರಮಗಳನ್ನು ಕೈಗೊಳ್ಳಲು ನೂತನ ತಿದ್ದುಪಡಿಯಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಈ ಕಾನೂನು ಮತ್ತು ನಿಯಮಗಳನ್ನು ತತ್ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಜಾರಿಗೊಳಿಸದೇ ಇದ್ದಲ್ಲಿ, ಕೇಂದ್ರ ಸರ್ಕಾರದ ಈ ನಡೆಯು ನಿಷ್ಪ್ರಯೋಜಕವೆನಿಸಲಿದೆ. ಇಷ್ಟು ಮಾತ್ರವಲ್ಲ, ರಸ್ತೆ ಅಪಘಾತಗಳು ಮತ್ತು ಇವುಗಳಿಂದಾಗಿ ಶಾಶ್ವತ ಅಂಗವೈಕಲ್ಯ ಅಥವಾ ಮರಣಕ್ಕೆ ಈಡಾಗುವವರ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.


ಡಾ. ಸಿ. ನಿತ್ಯಾನಂದ ಪೈ, ಪುತ್ತೂರು











Sunday, November 13, 2016

EYES ON DIABETES

                           ನ. ೧೪ : ವಿಶ್ವ ಮಧುಮೇಹ ದಿನಾಚರಣೆ
                    ಮಧುಮೇಹದ ಮೇಲೊಂದು ಕಣ್ಣಿರಲಿ
           

ಮಧುಮೇಹ ಎನ್ನುವ ಸುಂದರ ನಾಮಧೇಯದ ಗಂಭೀರ ಕಾಯಿಲೆಯು, ಈ ವ್ಯಾಧಿಪೀಡಿತರ ಪಾಲಿಗೆ ಅತ್ಯಂತ “ ಕಹಿ “ ಎಂದೆನಿಸುವುದು ಸುಳ್ಳೇನಲ್ಲ. ಅದರಲ್ಲೂ ವಿಶೇಷವಾಗಿ ಸಿಹಿತಿಂಡಿಗಳನ್ನು ಮೆಚ್ಚಿ ಸವಿಯುವ ಭಾರತೀಯರಿಗೆ, ಈ ವ್ಯಾಧಿಯ ಇರುವಿಕೆಗಿಂತಲೂ ಹೆಚ್ಚಾಗಿ, ಸಕ್ಕರೆ ಹಾಗೂ ಬೆಲ್ಲಗಳನ್ನು ಬಳಸಿ ಸಿದ್ಧಪಡಿಸುವ ವೈವಿಧ್ಯಮಯ ಸಿಹಿತಿಂಡಿಗಳನ್ನು ತಿನ್ನುವಂತಿಲ್ಲ ಎನ್ನುವ ವಿಚಾರವೇ ಅತ್ಯಂತ ಅಸಹನೀಯವೆನಿಸುತ್ತದೆ ಎಂದಲ್ಲಿ ಅತಿಶಯೋಕ್ತಿ ಎನಿಸಲಾರದು. ಹುಟ್ಟಿನಿಂದ ಸಾವಿನ ತನಕ ನಾವು ಆಚರಿಸುವ ಪ್ರತಿಯೊಂದು ಸಮಾರಂಭಗಳಲ್ಲಿ ಸಿಹಿತಿಂಡಿಗಳಿಗೆ ಸಿಂಹಪಾಲು ಸಲ್ಲುತ್ತದೆ. ಪ್ರಾಯಶಃ ಇದೇ ಕಾರಣದಿಂದಾಗಿ ಜಗತ್ತಿನಲ್ಲೇ ಅತ್ಯಧಿಕ ಸಂಖ್ಯೆಯ ಮಧುಮೇಹ ಪೀಡಿತರು ನಮ್ಮ ದೇಶದಲ್ಲೇ ಇರುವುದರಿಂದಾಗಿ, ಭಾರತವು ವಿಶ್ವದ ಮಧುಮೇಹಿಗಳ ರಾಜಧಾನಿ “ ಎಂದೇ ಕರೆಯಲ್ಪಡುತ್ತಿದೆ. ವಿಶ್ವ ಮಧುಮೇಹ ದಿನದ ಸಲುವಾಗಿ ಈ ವ್ಯಾಧಿಯ ಬಗ್ಗೆ ಅರಿವು ಮೂಡಿಸುವ ಕಿಂಚಿತ್ ಮಾಹಿತಿ ಇಲ್ಲಿದೆ.

ವಿಶ್ವದ ಪ್ರತಿಯೊಂದು ರಾಷ್ಟ್ರಗಳ ಪ್ರಜೆಗಳನ್ನು ಕಾಡುತ್ತಿರುವ ಮಧುಮೇಹ ವ್ಯಾಧಿಯ ಪಿಡುಗು, ಇತ್ತೀಚಿನ ಕೆಲ ವರ್ಷಗಳಿಂದ ಅನಿಯಂತ್ರಿತವಾಗಿ ಹೆಚ್ಚುತ್ತಿದೆ. ಶಾಶ್ವತ ಪರಿಹಾರವಿಲ್ಲದ ಹಾಗೂ ಸಂಕೀರ್ಣ ಸಮಸ್ಯೆಗಳಿಗೆ ಮತ್ತು ಕಾರಣಾಂತರಗಳಿಂದ ರೋಗಿಯ ಅಕಾಲಿಕ ಮರಣಕ್ಕೂ ಕಾರಣವೆನಿಸಬಲ್ಲ ಈ ಗಂಭೀರ ಹಾಗೂ ಮಾರಕ ಕಾಯಿಲೆಯನ್ನು ನಾವಿಂದು ನಿಯಂತ್ರಿಸಬೇಕಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಅಂತರರಾಷ್ಟ್ರೀಯ ಮಧುಮೇಹ ಒಕ್ಕೂಟವು ವರ್ಷಂಪ್ರತಿ ನವೆಂಬರ್ ೧೪ ರಂದು ಆಚರಿಸುವ “ ವಿಶ್ವ ಮಧುಮೇಹ ದಿನ “ ಮತ್ತು ಈ ವ್ಯಾಧಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಯೋಜಿಸುತ್ತಿರುವ ಅಭಿಯಾನದಲ್ಲಿ ನಾವೆಲ್ಲರೂ ಪಾಲ್ಗೊಳ್ಳಬೇಕಿದೆ. ಏಕೆಂದರೆ ಮಧುಮೇಹ ಪೀಡಿತ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರಿಗೆ, ತಮ್ಮನ್ನು ಈ ವ್ಯಾಧಿ ಕಾಡುತ್ತಿರುವ  ಬಗ್ಗೆ ತಿಳಿದಿರುವುದೇ ಇಲ್ಲ!.

ಚಾರ್ಲ್ಸ್ ಬೆಸ್ಟ್ ಎನ್ನುವ ಸಹಸಂಶೋಧಕನೊಂದಿಗೆ ಸೇರಿ ಜಗತ್ತಿನ ಮಧುಮೇಹಿಗಳ ಪಾಲಿಗೆ ಸಾಕ್ಷಾತ್ “ ಸಂಜೀವಿನಿ “ ಎನಿಸಿರುವ “ ಇನ್ಸುಲಿನ್ “ ಔಷದವನ್ನು ೧೯೨೨ ಆವಿಷ್ಕರಿಸಿದ್ದ ಫ್ರೆಡರಿಕ್ ಬಾಂಟಿಂಗ್ ನ ಜನ್ಮದಿನವಾದ ನ. ೧೪ ನ್ನು, ವಿಶ್ವ ಮಧುಮೇಹ ದಿನವನ್ನಾಗಿ ಆಚರಿಸಲಾಗುತ್ತದೆ. ಜಗತ್ತಿನ ಪ್ರತಿಯೊಂದು ರಾಷ್ಟ್ರಗಳು ನ. ೧೪ ರಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ, ಮಧುಮೇಹದ ಬಗ್ಗೆ ಜನಸಾಮಾನ್ಯರಲ್ಲಿ ಅರಿವನ್ನು ಮೂಡಿಸುವ ಮತ್ತು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿವೆ.

ಮಧುಮೇಹ – ಡಯಾಬೆಟೆಸ್

ಮನುಷ್ಯನ ಶರೀರದಲ್ಲಿರುವ ಮೇದೋಜೀರಕ ಗ್ರಂಥಿಯಲ್ಲಿನ ಬೀಟಾ ಕಣಗಳು ಉತ್ಪಾದಿಸುವ ಇನ್ಸುಲಿನ್ ನ ಪ್ರಮಾಣದಲ್ಲಿ ಕೊರತೆಯಾದಾಗ ಅಥವಾ ಶರೀರವು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವಿಫಲವಾದಾಗ ಅಥವಾ ಇನ್ಸುಲಿನ್ ನ ಉತ್ಪಾದನೆಯೇ ಸಂಪೂರ್ಣವಾಗಿ ನಶಿಸಿದಾಗ, ಡಯಾಬೆಟೆಸ್ ಅರ್ಥಾತ್ ಮಧುಮೇಹ ವ್ಯಾಧಿಯು ಉದ್ಭವಿಸುತ್ತದೆ. ತತ್ಪರಿಣಾಮವಾಗಿ ರೋಗಿಯ ರಕ್ತದಲ್ಲಿನ ಸಕ್ಕರೆಯ ಅಂಶವು ಅನಿಯಂತ್ರಿತವಾಗಿ ಹೆಚ್ಚುತ್ತದೆ.

ಮಧುಮೇಹವನ್ನು ಇನ್ಸುಲಿನ್ ಅವಲಂಬಿತ ಮತ್ತು ಇನ್ಸುಲಿನ್ ಹೊರತುಪಡಿಸಿ ಅನ್ಯ ಔಷದ ಅವಲಂಬಿತ ಎಂದು ಸ್ಥೂಲವಾಗಿ ಎರಡು ವಿಧಗಳಾಗಿ ವಿಂಗಡಿಸಲಾಗಿದೆ. ಇದಲ್ಲದೇ ಮಹಿಳೆಯರು ಗರ್ಭಧರಿಸಿದಾಗ ಕಂಡುಬರುವ ಮಧುಮೇಹವು, ಸಾಮಾನ್ಯವಾಗಿ ಹೆರಿಗೆಯ ಬಳಿಕ ಕಣ್ಮರೆಯಾಗುವುದು.
ಇನ್ಸುಲಿನ್ ಅವಲಂಬಿತ ಮಧುಮೇಹವು ನವಜಾತ ಶಿಶುವಿನಿಂದ ಆರಂಭಿಸಿ, ಯಾವುದೇ ವಯಸ್ಸಿನವರಲ್ಲೂ ಉದ್ಭವಿಸಬಹುದು. ಆದರೆ ಎರಡನೆಯ ವಿಧದ ಮಧುಮೇಹವು ಹೆಚ್ಚಾಗಿ ಮಧ್ಯ ವಯಸ್ಸಿನಲ್ಲಿ ಅಥವಾ ಇಳಿವಯಸ್ಸಿನಲ್ಲಿ ತಲೆದೋರುವುದಾದರೂ, ಇತ್ತೀಚಿನ ಕೆಲವರ್ಷಗಳಿಂದ ಯೌವ್ವನಸ್ತರಲ್ಲೂ ಪತ್ತೆಯಾಗುತ್ತಿದೆ. ಜೊತೆಗೆ ಇವೆರಡೂ ವಿಧದ ಮಧುಮೇಹ ವ್ಯಾಧಿಯ ಪ್ರಮಾಣವು ತ್ವರಿತಗತಿಯಲ್ಲಿ ವೃದ್ಧಿಸುತ್ತಿದೆ.

ಆಧುನಿಕ – ನಿಷ್ಕ್ರಿಯ ಜೀವನ ಶೈಲಿ, ನಿರುಪಯುಕ್ತ ಮತ್ತು ಅತಿಆಹಾರ ಸೇವನೆ, ಅಧಿಕ ತೂಕ – ಅತಿಬೊಜ್ಜು, ತೀವ್ರ ಮಾನಸಿಕ ಒತ್ತಡ, ಅನುವಂಶಿಕತೆ ಮತ್ತು ಅನ್ಯ ಕೆಲ ಕಾರಣಗಳು ಮಧುಮೇಹ ಉದ್ಭವಿಸಲು ಪ್ರಮುಖ ಕಾರಣಗಳೆನಿಸುತ್ತವೆ.

ಪೂರ್ವಸೂಚನೆಗಳು

ಅತಿಆಯಾಸ, ಅತಿಯಾದ ಬಾಯಾರಿಕೆ, ಶರೀರದ ತೂಕ ಕಡಿಮೆಯಾಗುವುದು, ತಲೆತಿರುಗುವಿಕೆ, ಕಣ್ಣುಗಳ ದೃಷ್ಠಿ ಮಂಜಾಗುವುದು, ಪದೇಪದೇ ಮೂತ್ರ ವಿಸರ್ಜಿಸಬೇಕೆನಿಸುವುದು, ಮೂತ್ರಾಂಗಗಳಲ್ಲಿ ತುರಿಕೆ, ಗಾಯಗಳು ಮತ್ತು ಅನ್ಯ ಕಾಯಿಲೆಗಳು ಬೇಗನೆ ವಾಸಿಯಾಗದೇ ಉಲ್ಬಣಿಸುವುದೇ ಮುಂತಾದ ಪೂರ್ವಸೂಚನೆಗಳು ಮಧುಮೇಹ ಪೀಡಿತರಲ್ಲಿ ಕಂಡುಬರುತ್ತವೆ.

ಪತ್ತೆಹಚ್ಚುವುದೆಂತು?

ಬೆಳಗ್ಗೆ ಆಹಾರ ಸೇವಿಸುವ ಮುನ್ನ ( ಬರೀ ಹೊಟ್ಟೆಯಲ್ಲಿ ) ನಿಮ್ಮ ರಕ್ತದಲ್ಲಿನ ಗ್ಲುಕೋಸ್ ನ ಪ್ರಮಾಣವು ೧೦೦ ಎಂ. ಜಿ / ಡಿ ಸಿ ಎಲ್ ಗಿಂತ ಹೆಚ್ಚಿದ್ದಲ್ಲಿ ಅಥವಾ ಮಧ್ಯಾಹ್ನ ಊಟಮಾಡಿದ ಎರಡು ಗಂಟೆಯ ಬಳಿಕ ೧೪೦ ಎಂ. ಜಿ / ಡಿ ಸಿ ಎಲ್ ಗಿಂತ ಅಧಿಕವಿದ್ದಲ್ಲಿ, ನಿಮಗೆ ಮಧುಮೇಹ ವ್ಯಾಧಿ ಇದೆಯೆಂದು ತಿಳಿಯಿರಿ. ಆದರೆ ರಕ್ತದಲ್ಲಿನ ಗ್ಲುಕೋಸ್ ನ ಪ್ರಮಾಣವು ಅಲ್ಪಪ್ರಮಾಣದಲ್ಲಿ ಹೆಚ್ಚಿದ್ದಲ್ಲಿ, ಕೇವಲ ಆಹಾರ ಸೇವನೆಯಲ್ಲಿ ಪಥ್ಯ ಮತ್ತು ಜೀವನ ಶೈಲಿಯ ಬದಲಾವಣೆಗಳಿಂದ ಇದನ್ನು ನಿಯಂತ್ರಿಸಬಹುದಾಗಿದೆ. ಈ ವಿಧಾನ ಅಪೇಕ್ಷಿತ ಪರಿಣಾಮ ನೀಡದಿದ್ದಲ್ಲಿ ಮಾತ್ರ ದೈನಂದಿನ ಔಷದ ಸೇವನೆ ಅನಿವಾರ್ಯವೆನಿಸುವುದು.

ಚಿಕಿತ್ಸೆ

ಮಧುಮೇಹ ಪೀಡಿತ ವ್ಯಕ್ತಿಗಳು ತಮ್ಮ ಜೀವನ ಶೈಲಿಯಲ್ಲಿ ಅವಶ್ಯಕ ಬದಲಾವಣೆಗಳನ್ನು ಮಾಡಿಕೊಳ್ಳುವುದರೊಂದಿಗೆ, ಆಹಾರ ಸೇವನೆಯಲ್ಲಿ ಪಥ್ಯ, ದಿನನಿತ್ಯ ವ್ಯಾಯಾಮ, ನಡಿಗೆ ಅಥವಾ ಕ್ರೀಡೆಗಳಲ್ಲಿ ಭಾಗವಹಿಸುವುದು, ಶರೀರದ ತೂಕ ಮತ್ತು ಅಧಿಕ ಬೊಜ್ಜನ್ನು ಇಳಿಸಿಕೊಳ್ಳುವುದು, ಮಾನಸಿಕ ಒತ್ತಡವನ್ನು ನಿವಾರಿಸಿಕೊಳ್ಳುವುದರೊಂದಿಗೆ ತಜ್ಞ ವೈದ್ಯರು ಸೂಚಿಸಿದ ಔಷದಗಳನ್ನು ಕ್ರಮಬದ್ಧವಾಗಿ ಸೇವಿಸುವ ಮೂಲಕ ಈ ವ್ಯಾಧಿಯನ್ನು ನಿಶ್ಚಿತವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದಾಗಿದೆ. ಜೊತೆಗೆ ನಿಗದಿತ ಅವಧಿಯಲ್ಲಿ ರಕ್ತಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ, ತಮ್ಮ ವ್ಯಾಧಿ ನಿಯಂತ್ರಣದಲ್ಲಿರುವ ಅಥವಾ ಹದ್ದುಮೀರಿರುವ ವಿಚಾರವನ್ನು ಸುಲಭದಲ್ಲೇ ಅರಿತುಕೊಳ್ಳಬಹುದಾಗಿದೆ.

ತಪ್ಪುಕಲ್ಪನೆಗಳು

ಮಧುಮೇಹ ಪೀಡಿತರಿಗೆ ಕೇವಲ ಸಕ್ಕರೆಯನ್ನು ಬಳಸಿ ತಯಾರಿಸಿದ ಖಾದ್ಯಪೇಯಗಳು ನಿಷಿದ್ಧ. ಆದುದರಿಂದ ಬೆಲ್ಲ ಮತ್ತು ಜೇನುತುಪ್ಪಗಳನ್ನು ಸೇವಿಸಬಹುದು ಎಂದು ಅನೇಕರು ನಂಬಿದ್ದು, ಇದು ಅಪ್ಪಟ ಸುಳ್ಳು. ಏಕೆಂದರೆ ಸಕ್ಕರೆ ಮತ್ತು ಬೆಲ್ಲಗಳನ್ನು ತಯಾರಿಸುವುದ ಕಬ್ಬಿನಿಂದಲೇ ಎನ್ನುವುದು ನಿಮಗೂ ತಿಳಿದಿದೆಯಲ್ಲವೇ?.

ಮಧುಮೇಹ ವ್ಯಾಧಿಯನ್ನು ಶಾಶ್ವತವಾಗಿ ಗುಣಪಡಿಸಬಲ್ಲ ಔಷದವನ್ನು ಇಂದಿನ ತನಕ ಯಾವುದೇ ವೈದ್ಯಕೀಯ ವಿಜ್ಞಾನಿಗಳು ಪತ್ತೆಹಚ್ಚಿಲ್ಲ. ಆದರೆ ಈ ವ್ಯಾಧಿಯಲ್ಲದೇ ಶಾಶ್ವತ ಪರಿಹಾರವೇ ಇಲ್ಲದ ಅನ್ಯ ಕೆಲ ವ್ಯಾಧಿಗಳನ್ನೂ ಶಾಶ್ವತವಾಗಿ ಗುಣಪಡಿಸುವುದಾಗಿ ಘೋಷಿಸುವ ಜಾಹೀರಾತುಗಳಿಗೆ ನಮ್ಮ ದೇಶದಲ್ಲಿ ಬರವಿಲ್ಲ. ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುವ ಇಂತಹ “ ದಾರಿತಪ್ಪಿಸುವ ಜಾಹೀರಾತು “ ಗಳಿಗೆ ಮರುಳಾಗಿ, ತಾವು ಸೇವಿಸುತ್ತಿದ್ದ ಔಷದಗಳನ್ನು ತ್ಯಜಿಸಿ, ನಕಲಿ ವೈದ್ಯರ – ಔಷದ ತಯಾರಕರ ಚಿಕಿತ್ಸೆಗಳನ್ನು ಪ್ರಯೋಗಿಸಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿಗಳ ಸಂಖ್ಯೆಯೂ ಕಡಿಮೆಯೇನಿಲ್ಲ. ಇವೆಲ್ಲವುಗಳ ಅರಿವಿದ್ದರೂ ಆರೋಗ್ಯ ಇಲಾಖೆ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ಇಂತಹ ಕಾನೂನುಬಾಹಿರ ಜಾಹೀರಾತುಗಳನ್ನು ನೀಡುವವರ ವಿರುದ್ಧ ಯಾವುದೇ ಕಾನೂನುಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಪ್ರಾಯಶಃ ಇದೇ ಕಾರಣದಿಂದಾಗಿ ನಮ್ಮ ದೇಶದಲ್ಲಿ ಇಂತಹ ವ್ಯಾಧಿಗಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ.

ನೊಬೆಲ್ ಪ್ರಶಸ್ತಿ

ಮಧುಮೇಹ ಹಾಗೂ ಶಾಶ್ವತ ಪರಿಹಾರವಿಲ್ಲದ ಅನ್ಯ ವ್ಯಾಧಿಗಳನ್ನು ನಿಶ್ಚಿತವಾಗಿ ಮತ್ತು ಶಾಶ್ವತವಾಗಿ ಗುಣಪಡಿಸಬಲ್ಲ ಔಷದಗಳನ್ನು ಪತ್ತೆ ಹಚ್ಚಿದವರಿಗೆ “ ನೊಬೆಲ್ ಪ್ರಶಸ್ತಿ “ ಕಟ್ಟಿಟ್ಟ ಬುತ್ತಿ. ಇಂತಹ ಕಾಯಿಲೆಗಳನ್ನು ಗುಣಪಡಿಸಬಲ್ಲ ಔಷದಗಳನ್ನು ತಾವು ಸಂಶೋಧಿಸಿರುವುದಾಗಿ ಜಾಹೀರಾತುಗಳನ್ನು ನೀಡಿ, ಜುಜುಬಿ ಮೊತ್ತದ ಹಣವನ್ನು ಸಂಪಾದಿಸುವುದರ ಬದಲಾಗಿ, ನೊಬೆಲ್ ಪ್ರಶಸ್ತಿಯೊಂದಿಗೆ ಲಕ್ಷಾಂತರ ಡಾಲರ್ ಬಹುಮಾನವನ್ನೂ ಗಳಿಸುವ ಅವಕಾಶವನ್ನು ಇವರು ಬಳಸಿಕೊಳ್ಳದಿರಲು ಕಾರಣವೇನೆಂದು ಇದೀಗ ನಿಮಗೂ ಅರ್ಥವಾಗಿರಬೇಕಲ್ಲವೇ?.

ಡಾ. ಸಿ. ನಿತ್ಯಾನಂದ ಪೈ, ಪುತ್ತೂರು




Saturday, November 5, 2016

CONSTRUCTION WASTE - RECYCLE AND REUSE


          ಕಟ್ಟಡಗಳ ಭಗ್ನಾವಶೇಷ : ಮರುಬಳಕೆಗಿದೆ ಅವಕಾಶ !

ನಿರಂತರ ಹಾಗೂ ಅನಿಯಂತ್ರಿತವಾಗಿ ಹೆಚ್ಚುತ್ತಿರುವ ಭಾರತದ ಜನಸಂಖ್ಯೆಗೆ ಅನುಗುಣವಾಗಿ ನಾವಿಂದು ನಿರ್ಮಿಸುತ್ತಿರುವ ವಸತಿ ಹಾಗೂ ವಾಣಿಜ್ಯ ಕಟ್ಟಡಗಳು, ರಸ್ತೆ, ಸೇತುವೆ, ಫ್ಲೈ ಓವರ್, ಸಬ್ ವೇ ಇತ್ಯಾದಿಗಳ ನಿರ್ಮಾಣ ಕಾಮಗಾರಿಗಳೂ ಶರವೇಗದಲ್ಲಿ ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಹಳೆಯ ಹಾಗೂ ದುಸ್ಥಿತಿಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸುವ ಕಾಮಗಾರಿಗಳೂ ಎಡೆಬಿಡದೆ ಸಾಗುತ್ತಿವೆ. ತತ್ಪರಿಣಾಮವಾಗಿ ಇವುಗಳಿಂದ ಉತ್ಪನ್ನವಾಗುವ ತ್ಯಾಜ್ಯಗಳ ಪ್ರಮಾಣವೂ ಸ್ವಾಭಾವಿಕವಾಗಿ ಹೆಚ್ಚುತ್ತಿವೆ. ಈ ತ್ಯಾಜ್ಯಗಳನ್ನು ನಾವು ಮರುಬಳಕೆ ಮಾಡದೇ ಇದ್ದಲ್ಲಿ, ಇವುಗಳನ್ನು ತುಂಬಿಸಲು ಅಥವಾ ವಿಲೇವಾರಿ ಮಾಡಲು ಬೇಕಾಗುವ ಲ್ಯಾಂಡ್ ಫಿಲ್ ಸೈಟ್ ಗಳ ಸಂಖ್ಯೆಯೂ ಇನ್ನಷ್ಟು ವೃದ್ಧಿಸಲಿದೆ. ಲಭ್ಯ ಮಾಹಿತಿಯಂತೆ ಪುರಸಭಾ ತ್ಯಾಜ್ಯಗಳಲ್ಲಿ ಶೇ. ೧೦ ರಿಂದ ೨೦ ರಷ್ಟಿರುವ ಇಂತಹ ತ್ಯಾಜ್ಯಗಳನ್ನು ಪುನರ್ ಆವರ್ತನಗೊಳಿಸಿ ಮರುಬಳಕೆ ಮಾಡದೇ ಇದ್ದಲ್ಲಿ, ಈ ತ್ಯಾಜ್ಯಗಳಿಂದ ಉದ್ಭವಿಸಲಿರುವ ಗಂಭೀರ ಮತ್ತು ಅಪಾಯಕಾರಿ ಸಮಸ್ಯೆಗಳು ದೇಶದ ಪ್ರಗತಿಗೆ ಕಂಟಕವಾಗಿ ಪರಿಣಮಿಸಲಿವೆ.

ಭಗ್ನಾವಶೇಷಗಳು

ಬಹುತೇಕ ನೂತನ ಕಟ್ಟಡಗಳ ನಿರ್ಮಾಣದ ಸಂದರ್ಭದಲ್ಲಿ, ಹಳೆಯ ಕಟ್ಟಡಗಳನ್ನು ಕೆಡವಲಾಗುತ್ತದೆ. ಅದೇ ರೀತಿಯಲ್ಲಿ ಕೆಲ ಹಳೆಯ ಕಟ್ಟಡಗಳನ್ನು ಪುನರ್ ನವೀಕರಿಸಲಾಗುತ್ತದೆ. ಈ ಸಂದರ್ಭದಲ್ಲಿ ಅಗಾಧ ಪ್ರಮಾಣದ ತ್ಯಾಜ್ಯಗಳು ಉತ್ಪನ್ನವಾಗುತ್ತವೆ. ಸಾಮಾನ್ಯವಾಗಿ ಇಂತಹ ತ್ಯಾಜ್ಯಗಳನ್ನು ನಿರುಪಯುಕ್ತ ಎಂದು ಪರಿಗಣಿಸುವುದರಿಂದ, ಅಯಾ ಪಟ್ಟಣ ಅಥವಾ ನಗರಗಳ ಹೊರವಲಯದಲ್ಲಿನ ರಾಜ್ಯ ಅಥವಾ ರಾಷ್ಟ್ರೀಯ ಹೆದ್ದಾರಿಗಳ ಬದಿಗಳಲ್ಲಿ ತಂದು ಸುರಿಯಲಾಗುತ್ತದೆ.

ಕತ್ತಲಾದ ಬಳಿಕವೇ ನಡೆಯುವ ಇಂತಹ “ ಅನೈತಿಕ ತ್ಯಾಜ್ಯ ವಿಲೇವಾರಿ “ ಯಿಂದಾಗಿ, ರಸ್ತೆಗಳ ಇಕ್ಕೆಲಗಳಲ್ಲಿರುವ ಚರಂಡಿಗಳು ಮುಚ್ಚಲ್ಪಡುವುದರಿಂದ ಮಳೆಗಾಲದ ದಿನಗಳಲ್ಲಿ ನೂತನ ರಸ್ತೆಗಳೂ ನಿರ್ನಾಮಗೊಳ್ಳುತ್ತವೆ. ಮುನಿಸಿಪಲ್ ಕಾಯಿದೆಯಂತೆ ಇಂತಹ ತ್ಯಾಜ್ಯಗಳನ್ನು ಕೇವಲ ಲ್ಯಾಂಡ್ ಫಿಲ್ ಸೈಟ್ ಗಳಲ್ಲಿ ಮಾತ್ರ ವಿಲೇವಾರಿ ಮಾಡಬೇಕಾಗುವುದಾದರೂ, ರಸ್ತೆಗಳ ಬದಿಗಳಲ್ಲಿ ಸುರಿಯುವ ಹವ್ಯಾಸ ದಿನೇದಿನೇ ಹೆಚ್ಚುತ್ತಿದೆ. ನಿಶಾಚರರು ನಡೆಸುವ ಈ ಕಾರ್ಯಾಚರಣೆಯನ್ನು ತಡೆಗಟ್ಟಲು ಆಗದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಅನಿವಾರ್ಯವಾಗಿ ಸುಮ್ಮನಿರಬೇಕಾದ ಸನ್ನಿವೇಶ ಸೃಷ್ಟಿಯಾಗುತ್ತಿದೆ.

ತ್ಯಾಜ್ಯ – ವಿಲೇವಾರಿ

ನಮ್ಮ ದೇಶದಲ್ಲಿ ವರ್ಷಂಪ್ರತಿ ೧೦ ರಿಂದ ೧೫ ದಶಲಕ್ಷ ಟನ್ ಗಳಷ್ಟು ಪ್ರಮಾಣದ “ ನಿರ್ಮಾಣ ಕಾಮಗಾರಿಗಳ ತ್ಯಾಜ್ಯ “ ಉತ್ಪನ್ನವಾಗುತ್ತವೆ. ಆದರೆ ಇದರ ಅತಿ ಸಣ್ಣ ಪಾಲು ಮಾತ್ರ ಮರುಬಳಕೆಯಾಗುತ್ತಿದೆ. ಮುನಿಸಿಪಲ್ ಘನತ್ಯಾಜ್ಯ ನಿರ್ವಹಣೆಯ ಕಾಯಿದೆ ೨೦೦೦ ದಂತೆ, ಇಂತಹ ತ್ಯಾಜ್ಯಗಳನ್ನು ಪ್ರತ್ಯೆಕಿಸಬೇಕಾಗಿದ್ದರೂ, ಅನ್ಯ ತ್ಯಾಜ್ಯಗಳೊಂದಿಗೆ ಇವುಗಳನ್ನು ಬೆರೆಸಿ ವಿಲೇವಾರಿ ಮಾಡಲಾಗುತ್ತಿದೆ. ಗತವರ್ಷದಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ್ದ ಭೀಕರ ನೆರೆ ದುರಂತಕ್ಕೆ ಅನಿಯಂತ್ರಿತ, ಕಾನೂನುಬಾಹಿರ ಮತ್ತು ಅತಿಯಾದ ನಿರ್ಮಾಣ ಕಾಮಗಾರಿಗಳು ಮತ್ತು ಇವುಗಳಿಂದ ಉತ್ಪನ್ನವಾಗಿದ್ದ ತ್ಯಾಜ್ಯಗಳನ್ನು ಬೇಕಾಬಿಟ್ಟಿಯಾಗಿ ವಿಲೇವಾರಿ ಮಾಡಿದ್ದುದೇ ಕಾರಣವೆನಿಸಿತ್ತು.

ಪುನರ್ ಆವರ್ತನ – ಮರುಬಳಕೆ        

ಅನೇಕ ದೇಶಗಳಲ್ಲಿ ಕಟ್ಟಡಗಳನ್ನು ಧ್ವಂಸಗೊಳಿಸುವ ಸಂದರ್ಭದಲ್ಲಿ ದೊರೆಯುವ ಇಟ್ಟಿಗೆ, ಕಲ್ಲು ಮತ್ತು ಕಾಂಕ್ರೀಟ್ ತುಂಡುಗಳನ್ನು ಹುಡಿಮಾಡಿದ ಬಳಿಕ, ಇವುಗಳನ್ನು ನೂತನ ರಸ್ತೆಗಳ ನಿರ್ಮಾಣದಲ್ಲಿ ಬಳಸಲಾಗುತ್ತಿದೆ. ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಲ್ಲೂ ಈ ವಿಧಾನವನ್ನು ಅನುಸರಿಸುವುದಾದಲ್ಲಿ, ಈ ವಿನೂತನ ವಿಧಾನವನ್ನು ಭಾರತದಲ್ಲೂ ಅನುಷ್ಠಾನಿಸುವುದು ಅಸಾಧ್ಯವೇನಲ್ಲ. ಇಂತಹ ಉಪಯುಕ್ತ ಉಪಕ್ರಮಗಳಿಂದ ನೂತನ ನಿರ್ಮಾಣ ಕಾಮಗಾರಿಗಳ ವೆಚ್ಚ ಕಡಿಮೆಯಾಗುವುದರೊಂದಿಗೆ, ನಿರುಪಯುಕ್ತ ತ್ಯಾಜ್ಯಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಬಹುದಾಗಿದೆ. ಇದಕ್ಕೂ ಮಿಗಿಲಾಗಿ ರಸ್ತೆಗಳ ಬದಿಗಳಲ್ಲಿ ಇಂತಹ ತ್ಯಾಜ್ಯಗಳನ್ನು ಸುರಿಯುವ ಮೂಲಕ ರಸ್ತೆಗಳನ್ನೇ ಹಾಳುಗೆಡಹುವ ಅನಿಷ್ಠ ಪದ್ದತಿಗೆ ವಿದಾಯ ಹೇಳಬಹುದಾಗಿದೆ.

ಒಂದೆರಡು ವರ್ಷಗಳ ಹಿಂದಿನ ಮಾಹಿತಿಯಂತೆ ದೆಹಲಿಯ ಮುನಿಸಿಪಲ್ ಕಾರ್ಪೋರೇಶನ್ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸುಮಾರು ೪೦೦೦ ಟನ್ ಗಳಷ್ಟು ನಿರ್ಮಾಣ ಕಾಮಗಾರಿಗಳ ತ್ಯಾಜ್ಯಗಳನ್ನು ಸಂಗ್ರಹಿಸಲಾಗುತ್ತಿತ್ತು. ಅರ್ಥಾತ್, ಒಂದು ವರ್ಷದಲ್ಲಿ ೧.೫ ದಶಲಕ್ಷ ಟನ್ ತ್ಯಾಜ್ಯವು ದೇಶದ ರಾಜಧಾನಿಯೊಂದರಲ್ಲೇ ಸಂಗ್ರಹವಾಗುತ್ತಿತ್ತು. ಈ ತ್ಯಾಜ್ಯಗಳನ್ನು ಮರುಬಳಕೆ ಅಥವಾ ಪುನರ್ ಆವರ್ತನಗೊಳಿಸಿ ಬಳಸಿದ್ದಲ್ಲಿ, ಅಲ್ಲಿನ ಲ್ಯಾಂಡ್ ಫಿಲ್ ಸೈಟ್ ಗಳ ಆಯುಷ್ಯವು ಇನ್ನಷ್ಟು ಹೆಚ್ಚುತ್ತಿತ್ತು!. ಜೊತೆಗೆ ನೂತನ ರಸ್ತೆಗಳ ನಿರ್ಮಾಣದಲ್ಲಿ ಈ ತ್ಯಾಜ್ಯಗಳನ್ನು ಬಳಸಿದ್ದಲ್ಲಿ, ನಿರ್ಮಾಣ ವೆಚ್ಚ ಕಡಿಮೆಯಾಗುತ್ತಿದ್ದುದರಿಂದ ಇನ್ನಷ್ಟು ಹೊಸ ರಸ್ತೆಗಳನ್ನು ನಿರ್ಮಿಸಬಹುದಾಗಿತ್ತು.

ಕೊನೆಯ ಮಾತು

ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳ ಯಾದಿಯಲ್ಲಿರುವ ಅಮೇರಿಕ. ಇಂಗ್ಲೆಂಡ್, ಜಪಾನ್, ಜರ್ಮನಿ, ಡೆನ್ಮಾರ್ಕ್ ಮತ್ತಿತರ ದೇಶಗಳು ಈಗಾಗಲೇ ಇಂತಹ ತ್ಯಾಜ್ಯಗಳನ್ನು ಪುನರ್ ಆವರ್ತನಗೊಳಿಸುವ ಅಥವಾ ಮರುಬಳಕೆ ಮಾಡುವ ಸಲುವಾಗಿ ಅವಶ್ಯಕ ಕಾನೂನು – ನಿಯಮಗಳನ್ನು ರೂಪಿಸಿವೆ. ಮಾತ್ರವಲ್ಲ, ಇವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುತ್ತಿವೆ. ಆದರೆ ನಮ್ಮ ದೇಶದಲ್ಲಿ ಇಂದಿನ ತನಕ ಇಂತಹ ತ್ಯಾಜ್ಯಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಲು ಉಪಯುಕ್ತವೆನಿಸುವ ಮತ್ತು ನೂತನ ನಿರ್ಮಾಣ ಕಾಮಗಾರಿಗಳ ವೆಚ್ಚವನ್ನು ಕಡಿಮೆಮಾಡಬಲ್ಲ ವಿಧಾನಗಳ ಬಗ್ಗೆ ಚಿಂತಿಸಲು ನಮ್ಮನ್ನಾಳುವವರಿಗೆ ಸಮಯವೇ ಇಲ್ಲ!.

ಡಾ. ಸಿ. ನಿತ್ಯಾನಂದ ಪೈ, ಪುತ್ತೂರು




                                                                                                 

Wednesday, October 26, 2016

BDA : SUPPRESSING RTI?

           ಬಿ ಡಿ ಎ : ಮಾಹಿತಿಹಕ್ಕು ಕಾಯಿದೆಯನ್ನು ದಮನಿಸುತ್ತಿದೆಯೇ?

ಕೆಲದಿನಗಳಿಂದ ಸಾಕಷ್ಟು ವಾದವಿವಾದಗಳಿಗೆ ಗ್ರಾಸವೆನಿಸಿರುವ ಮತ್ತು ಮಾಧ್ಯಮಗಳಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವೆನಿಸಿರುವ “ ಉಕ್ಕಿನ ಮೇಲ್ಸೇತುವೆ “ ಯ ನಿರ್ಮಾಣಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮಾಹಿತಿಹಕ್ಕು ಕಾರ್ಯಕರ್ತರೊಬ್ಬರಿಗೆ ನೀಡಲು ಬಿ ಡಿ ಎ ನಿರಾಕರಿಸಿದೆ. ತನ್ಮೂಲಕ ಸರ್ಕಾರವೇ ತನ್ನ ಪ್ರಜೆಗಳಿಗೆ ನೀಡಿದ್ದ ಮಾಹಿತಿ ಪಡೆಯುವ ಹಕ್ಕನ್ನು ದಮನಿಸಿದೆ!.

 ದೇಶಾದ್ಯಂತ ಮಾಹಿತಿ ಪಡೆಯುವ ಹಕ್ಕು ಕಾಯಿದೆ ಜಾರಿಗೆ ಬಂದು ೧೧ ವರ್ಷಗಳೇ ಸಂದಿವೆ. ಈ ಅವಧಿಯಲ್ಲಿ ಈ ಕಾಯಿದೆಯನ್ನು ದುರ್ಬಲಗೊಳಿಸಲು, ತೆರೆಯ ಮರೆಯಲ್ಲಿ ನಿರಂತರ ಪ್ರಯತ್ನಗಳೂ ನಡೆಯುತ್ತಲೇ ಇವೆ. ಪ್ರಾರಂಭಿಕ ಹಂತದಿಂದಲೂ ಈ ಕಾಯಿದೆಯನ್ನು ವಿರೋಧಿಸುತ್ತಿದ್ದ ಅನೇಕ ಸರ್ಕಾರಿ ಅಧಿಕಾರಿಗಳ ಮತ್ತು ರಾಜಕಾರಣಿಗಳ ಬಹುಕೋಟಿ ಹಗರಣಗಳು ಬೆಳಕಿಗೆ ಬರಲು ಈ ಪ್ರಬಲ ಕಾಯಿದೆ ಕಾರಣವೆನಿಸಿದೆ. ಜನಸಾಮಾನ್ಯರ ಪಾಲಿಗೆ ಅತ್ಯಂತ ಪ್ರಬಲ ಅಸ್ತ್ರವೆನಿಸಿರುವ ಹಕ್ಕು ಕಾಯಿದೆಯನ್ವಯ ಅರ್ಜಿ ಸಲ್ಲಿಸಿದ್ದ ಪ್ರಜೆಗಳಿಗೆ ಕುಂಟು ನೆಪವನ್ನು ಮುಂದೊಡ್ಡಿ ಅಪೇಕ್ಷಿತ ಮಾಹಿತಿಗಳನ್ನು ನೀಡಲು ನಿರಾಕರಿಸಿದ ಪ್ರಕರಣಗಳು ಸಾಕಷ್ಟಿವೆ. ಇದೀಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಇದಕ್ಕೆ ಸೇರ್ಪಡೆಯಾಗಿದೆ!.

ಬೆಂಗಳೂರಿನಲ್ಲಿ ನಿರ್ಮಾಣಗೊಳ್ಳಲಿರುವ ನೂತನ  " ಸ್ಟೀಲ್ ಫ್ಲೈ ಓವರ್ " ಗೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸುವಂತೆ ಮಾ.. ಕಾಯಿದೆಯನ್ವಯ ಅರ್ಜಿಯನ್ನು ಸಲ್ಲಿಸಿದ್ದ ವ್ಯಕ್ತಿಗೆ ಬಿ. ಡಿ. ಎ ಸಾರ್ವಜನಿಕ ಮಾಹಿತಿ ಅಧಿಕಾರಿ ನೀಡಿರುವ ಉತ್ತರವು, ಈ ಕಾಯಿದೆಯ ಮೂಲ ಉದ್ದೇಶಕ್ಕೆ ಧಕ್ಕೆಯುಂಟುಮಾಡುವಂತಿದೆ!.

ಮಾಹಿತಿಯೇ ಅಲ್ಲ!

ಬೆಂಗಳೂರಿನ ಬಸವೇಶ್ವರ ವೃತ್ತದಿಂದ ಹೆಬ್ಬಾಳವನ್ನು ಸಂಪರ್ಕಿಸುವ ಸಲುವಾಗಿ ನಿರ್ಮಿಸಲು ಉದ್ದೇಶಿಸಿರುವ ಸುಮಾರು ೧೮೦೦ ಕೋಟಿ ರೂ. ವೆಚ್ಚದ ಸ್ಟೀಲ್ ಫ್ಲೈ ಓವರ್ ನಿರ್ಮಾಣದ ಸಲುವಾಗಿ ಕರೆದಿದ್ದ ಟೆಂಡರ್ ನ ವಿವರಗಳನ್ನು ನೀಡುವಂತೆ ಅರ್ಜಿಯನ್ನು ಸಲ್ಲಿಸಿದ್ದ ಸಾಯಿದತ್ತ ಎನ್ನುವ ಕಾರ್ಯಕರ್ತರಿಗೆ ಬಿ.ಡಿ. ಎ ನೀಡಿರುವ ಉತ್ತರ ಇಂತಿದೆ. ಸಾ. ಮಾ ಅಧಿಕಾರಿ ನೀಡಿರುವ ಉತ್ತರದಲ್ಲಿ ಅರ್ಜಿದಾರರು ಕೋರಿರುವ ಮಾಹಿತಿಗಳನ್ನು ನೀಡಲು ಸಾಧ್ಯವಿಲ್ಲ, ಏಕೆಂದರೆ ಈ ಮಾಹಿತಿಗಳು ಮಾಹಿತಿಹಕ್ಕು ಕಾಯಿದೆಯನ್ವಯ " ಮಾಹಿತಿ " ಎಂದು ಅರ್ಥೈಸುವಂತಿಲ್ಲ. ಅರ್ಜಿದಾರರು ಅಪೇಕ್ಷಿಸಿರುವ ದಾಖಲೆಗಳನ್ನು ಸೃಷ್ಟಿಸಬೇಕಿದ್ದು, ಇದರ ವಿವರಗಳು ಬಿ.ಡಿ. ಎ ಮತ್ತು ಖಾಸಗಿ ಸಂಸ್ಥೆಗಳ ಒಡಂಬಡಿಕೆಯ ಷರತ್ತು - ನಿಯಮಗಳ ಅಧೀನದಲ್ಲಿ ಬರುತ್ತವೆ. ಇದಲ್ಲದೇ ಅಪೇಕ್ಷಿತ ಮಾಹಿತಿಗಳು “ ವೈಯುಕ್ತಿಕ “ ವಾಗಿದ್ದು, ಇದನ್ನು ಇದನ್ನು ಪ್ರಕಟಿಸುವುದಕ್ಕೆ ಮತ್ತು ಸಾರ್ವಜನಿಕ ಚಟುವಟಿಕೆ ಹಾಗೂ ಹಿತಾಸಕ್ತಿಗಳಿಗೆ ಯಾವುದೇ ಸಂಬಂಧವಿಲ್ಲ ಎನ್ನಲಾಗಿದೆ.

ಇಷ್ಟು ಮಾತ್ರವಲ್ಲ, ಮಾಹಿತಿಹಕ್ಕು ಕಾಯಿದೆಯ ಸೆಕ್ಷನ್ ೮ ( ೧ ) ( ಜೆ ) ಯಂತೆ ಈ ಮಾಹಿತಿಯು “ ತೃತೀಯ ವ್ಯಕ್ತಿ “ ಗೆ ಸಂಬಂಧಿಸಿದ್ದಾಗಿದ್ದು, ಅಪೇಕ್ಷಿತ ಮಾಹಿತಿಗಳನ್ನು ಅರ್ಜಿದಾರರಿಗೆ ನೀಡಲು ಕೆಲ ದಾಖಲೆಗಳನ್ನು ಸೃಷ್ಟಿಸಬೇಕಾಗುವುದು. ಬಿ ಡಿ ಎ ನ ಸಾರ್ವಜನಿಕ ಮಾಹಿತಿ ಅಧಿಕಾರಿ ನೀಡಿರುವ ಉತ್ತರದಲ್ಲಿ, ಕೇಂದ್ರ ಮಾಹಿತಿ ಆಯೋಗದ ಆದೇಶವೊಂದರಂತೆ “ ಮಾ. ಹ. ಕಾಯಿದೆಯ ಸೆಕ್ಷನ್ ೨ ( ಜೆ ) ಯನ್ವಯ ಯಾವುದೇ ಸಾರ್ವಜನಿಕ ಪ್ರಾಧಿಕಾರವು ದಾಖಲೆಗಳನ್ನು ಸೃಷ್ಟಿಸುವಂತಿಲ್ಲ. ಇದರೊಂದಿಗೆ ತಮಿಳುನಾಡಿನ ಮಾಹಿತಿ ಆಯೋಗವು ಯಾವುದೇ ಯೋಜನೆಯ ವಿವರಗಳನ್ನು ಯೋಜನೆಯ ಪ್ರಾರಂಭಿಕ ಹಂತದಲ್ಲಿ ಬಹಿರಂಗಪಡಿಸುವಂತಿಲ್ಲ ಎಂದು ಹಿಂದೆ ನೀಡಿದ್ದ  ತೀರ್ಪೊಂದನ್ನು ಉಲ್ಲೇಖಿಸಲಾಗಿದೆ.ಹಾಗೂ ಇದೇ ಕಾರಣದಿಂದಾಗಿ ಇದೀಗ ಪ್ರಾರಂಭಿಕ ಹಂತದಲ್ಲಿರುವ ಉಕ್ಕಿನ ಮೇಲ್ಸೇತುವೆಯ ನಿರ್ಮಾಣದ ಯೋಜನೆಯ ವಿವರಗಳನ್ನು ಬಹಿರಂಗಪಡಿಸಲಾಗದು ಎಂದು ಉತ್ತರಿಸಲಾಗಿದೆ.

ಇವೆಲ್ಲಕ್ಕೂ ಮಿಗಿಲಾಗಿ ಅರ್ಜಿದಾರರು ಅಪೇಕ್ಷಿಸಿರುವ ಮಾಹಿತಿಯು ಅಗಾಧವಾಗಿದ್ದು, ಇದನ್ನು ಒದಗಿಸಲು ಸಾಕಷ್ಟು ಸಂಪನ್ಮೂಲಗಳ ಅವಶ್ಯಕತೆಯಿದ್ದು ಇದಕ್ಕಾಗಿ ಸಾಕಷ್ಟು ಸಮಯವನ್ನೂ ವ್ಯಯಿಸಬೇಕಾಗುತ್ತದೆ. ಈ ಮಾಹಿತಿಗಳು ರಾಜ್ಯದ ಅಭಿವೃದ್ಧಿ  ಕ್ರಿಯಾ ಯೋಜನೆ ಮತ್ತು ಆರ್ಥಿಕ ಹಿತಗಳನ್ನು ಒಳಗೊಂಡಿರುವುದರಿಂದ, ಈ ಯೋಜನೆಯ ವಿವರಗಳನ್ನು ನೀಡುವಂತೆ ಸಲ್ಲಿಸಲಾಗಿರುವ ಅರ್ಜಿಯನ್ನು ಪುರಸ್ಕರಿಸುವಂತಿಲ್ಲ ಎಂದು ಸಾ. ಮಾ. ಅಧಿಕಾರಿ ಉತ್ತರಿಸಿದ್ದಾರೆ!.

ಸ್ವಯಂಪ್ರೇರಿತ ಮಾಹಿತಿ

ಮಾಹಿತಿಹಕ್ಕು ಕಾಯಿದೆಯನ್ವಯ ಕೆಲವೊಂದು ನಿರ್ದಿಷ್ಟ ಮಾಹಿತಿಗಳಿಗೆ ಸೆಕ್ಷನ್ ೮ ( ೧ ) ಮತ್ತು ೯ ರನ್ವಯ ವಿನಾಯಿತಿಯನ್ನು ನೀಡಲಾಗಿದೆ. ಇದೇ ಸೆಕ್ಷನ್ ನ ೮ ( ೧ ) ( ಜೆ ) ಯನ್ನು ತಿರುಚಿರುವ ಬಿ ಡಿ ಎ ನ ಸಾ. ಮಾ. ಅಧಿಕಾರಿಯು, ಈ ಸೆಕ್ಷನ್ ನ ಅಂತ್ಯದಲ್ಲಿ ನಮೂದಿಸಿರುವಂತೆ “ ಮೇಲೆ ಹೇಳಿದ ವಿನಾಯಿತಿಗಳು ಪರಿಪೂರ್ಣವಾದುದಲ್ಲ. ಈ ಮಾಹಿತಿಯನ್ನು ನೀಡುವುದರಿಂದ ಸಾರ್ವಜನಿಕ ಹಿತವನ್ನು ರಕ್ಷಿಸಿದಂತಾಗುತ್ತದೆ ( ಸೆಕ್ಷನ್ ೮ ( ೨ ) ) ಎಂದಾದಲ್ಲಿ, ಈ ಮಾಹಿತಿಯನ್ನು ನೀಡಬಹುದು “ ಎನ್ನುವ ಸಾಲನ್ನು ಅನುಕೂಲಕರವಾಗಿ ಮರೆತುಬಿಟ್ಟಿದ್ದಾರೆ!.

ಇವೆಲ್ಲಕ್ಕೂ ಮಿಗಿಲಾಗಿ ಮಾ. ಹ. ಕಾಯಿದೆ ೨೦೦೫ ಅನ್ವಯವಾಗುವ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಕೆಲವೊಂದು ಮಾಹಿತಿಗಳನ್ನು ಯಾರೂ ಕೇಳದಿದ್ದರೂ, ಸ್ವಯಂಪ್ರೇರಿತವಾಗಿ ತಮ್ಮ ಕಚೇರಿಯ ಸೂಚನಾ ಫಲಕ್ ಮತ್ತು ಅಂತರ್ಜಾಲ ತಾಣಗಳಲ್ಲಿ ಪ್ರಕಟಿಸಬೇಕೆಂದು ಹೇಳುತ್ತದೆ. ಇದೊಂದು ಬಹುಮುಖ್ಯ ಅಂಶವಾಗಿದ್ದು, ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆಯುವ ಎಲ್ಲ ಕಾಮಗಾರಿಗಳ ಸಂಪೂರ್ಣ ವಿವರಗಳನ್ನು ಸ್ವಯಂಪ್ರೇರಿತವಾಗಿ ಪ್ರಕಟಿಸುವ ಹೊಣೆಗಾರಿಕೆ ಇವುಗಳ ಮೇಲಿದೆ. ಅರ್ಥಾತ್, ಯಾರೊಬ್ಬರೂ ಕೇಳದೇ ಇದ್ದರೂ ಅಥವಾ ಮಾಹಿತಿಹಕ್ಕು ಕಾಯಿದೆಯನ್ವಯ ಅರ್ಜಿಯನ್ನು ಸಲ್ಲಿಸದೇ ಇದ್ದರೂ, ಸ್ಟೀಲ್ ಫ್ಲೈ ಓವರ್ ಕಾಮಗಾರಿಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಬಿ ಡಿ ಎ ಸ್ವಯಂಪ್ರೇರಿತವಾಗಿ ಪ್ರಕಟಿಸಲೇಬೇಕಾಗುತ್ತದೆ.

ಕೊನೆಯ ಮಾತು

ಬಿ ಡಿ ಎ ನ ಸಾ. ಮಾ. ಅಧಿಕಾರಿಯು ಅಪೇಕ್ಷಿತ ಮಾಹಿತಿಗಳನ್ನು ಒದಗಿಸದಿರುವ ಬಗ್ಗೆ ಅರ್ಜಿದಾರರು ಮಾ. ಹ. ಪ್ರಥಮ ಮೇಲ್ಮನವಿ ಪ್ರಾಧಿಕಾರಕ್ಕೆ ದೂರನ್ನು ನೀಡಿದ ಬಳಿಕವೂ ಅಪೇಕ್ಷಿತ ಮಾಹಿತಿ ಲಭಿಸದೇ ಇದ್ದಲ್ಲಿ, ರಾಜ್ಯ ಮಾಹಿತಿ ಆಯೋಗಕ್ಕೆ ದೂರನ್ನು ನೀಡುವುದರಲ್ಲಿ ಸಂದೇಹವಿಲ್ಲ. ಅಂತೆಯೇ ಮಾಹಿತಿ ಆಯೋಗವು ಅರ್ಜಿದಾರರು ಅಪೇಕ್ಷಿಸಿರುವ ಮಾಹಿತಿಗಳನ್ನು ಕ್ಷಿಪ್ರವಾಗಿ ಮತ್ತು ನಿಶ್ಶುಲ್ಕವಾಗಿ ನೀಡುವಂತೆ ಆದೇಶಿಸುವುದರಲ್ಲೂ ಸಂದೇಹವಿಲ್ಲ. ಇದರೊಂದಿಗೆ ಇನ್ನು ಮುಂದೆ ಇಂತಹ ಮಾಹಿತಿಗಳನ್ನು ಸ್ವಯಂಪ್ರೇರಿತವಾಗಿ ಪ್ರಕಟಿಸುವಂತೆ ಸೂಚಿಸಿದಲ್ಲಿ, ಇಂತಹ ಘಟನೆಗಳ ಪುನರಾವರ್ತನೆ ಆಗುವ ಸಾಧ್ಯತೆಗಳೂ ಇಲ್ಲ!.


ಡಾ. ಸಿ. ನಿತ್ಯಾನಂದ ಪೈ, ಪುತ್ತೂರು 


Monday, October 3, 2016

BREAST CANCER




     ಸ್ತನ ಕ್ಯಾನ್ಸರ್ : ಅರಿವು ಮೂಡಿಸುವ ಮಾಸ ಅಕ್ಟೋಬರ್ 

ಕೇವಲ ಮಧ್ಯವಯಸ್ಸನ್ನು ಮೀರಿದ ಮಹಿಳೆಯರನ್ನು ಮಾತ್ರ ಬಾಧಿಸುವ ವ್ಯಾಧಿಯೆಂದು ಅನೇಕ ಭಾರತೀಯರು ಇಂದಿಗೂ ನಂಬಿರುವ ಸ್ತನಗಳ ಕ್ಯಾನ್ಸರ್ ವ್ಯಾಧಿಯು, ಹದಿಹರೆಯದ ಹುಡುಗಿಯರು ಮತ್ತು ತರುಣಿಯರನ್ನೂ ಪೀಡಿಸಬಲ್ಲದು. ವಿಶೇಷವೆಂದರೆ ಈ ವ್ಯಾಧಿಯು ಕೇವಲ ಮಹಿಳೆಯರನ್ನು ಮಾತ್ರವಲ್ಲ, ಅತ್ಯಲ್ಪ ಪ್ರಮಾಣದ ಪುರುಷರನ್ನೂ ಬಾಧಿಸಬಲ್ಲದು ಎಂದು ನಿಮಗೂ ತಿಳಿದಿರಲಾರದು. ಈ ವಿಶಿಷ್ಟ ವ್ಯಾಧಿಯ ಬಗ್ಗೆ ನೀವು ತಿಳಿದಿರಲೇಬೇಕಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಅಗ್ರಸ್ಥಾನ 

ಜಾಗತಿಕ ಮಟ್ಟದಲ್ಲಿ ಮಹಿಳೆಯರಲ್ಲಿ ಪತ್ತೆಯಾಗುತ್ತಿರುವ ವೈವಿಧ್ಯಮಯ ಕ್ಯಾನ್ಸರ್ ಗಳಲ್ಲಿ ಸ್ತನ ಕ್ಯಾನ್ಸರ್ ಅಗ್ರಸ್ಥಾನದಲ್ಲಿದೆ. ಈ ವ್ಯಾಧಿಯನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆಹಚ್ಚುವುದರೊಂದಿಗೆ, ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳುವ ಮೂಲಕ ಇದರ ಮಾರಕತೆಯನ್ನು ನಿಶ್ಚಿತವಾಗಿಯೂ ನಿಯಂತ್ರಿಸಬಹುದಾಗಿದೆ. ಈ ಸಂದೇಶದೊಂದಿಗೆ, ಈ ವ್ಯಾಧಿಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇನ್ನಿತರ ಸಂಘಟನೆಗಳು ಜೊತೆಗೂಡಿ, ವರ್ಷಂಪ್ರತಿ ಅಕ್ಟೋಬರ್ ತಿಂಗಳನ್ನು " ಗುಲಾಬಿ ಮಾಸ " ವನ್ನಾಗಿ ಆಚರಿಸುತ್ತವೆ. ಹಾಗೂ ಇದಕ್ಕೆ ಗುಲಾಬಿ ವರ್ಣದ ರಿಬ್ಬನ್ ಲಾಂಛನವನ್ನಾಗಿ ಬಳಸಲಾಗುತ್ತಿದೆ.  

ಭಾರತದಲ್ಲಿ ಸ್ತನ ಕ್ಯಾನ್ಸರ್ ಪೀಡಿತರ ಬಗ್ಗೆ ನಿಖರವಾದ ಅಂಕಿಅಂಶಗಳು ಲಭ್ಯವಿಲ್ಲ. ಏಕೆಂದರೆ ನಮ್ಮ ದೇಶದಲ್ಲಿರುವ ಪ್ರತಿಯೊಂದು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಂದ ಇಂತಹ ಮಾಹಿತಿಯನ್ನು ಕ್ರಮಬದ್ಧವಾಗಿ ಸಂಗ್ರಹಿಸಿ, ಅವಶ್ಯಕ ವಿವರಗಳನ್ನು ದಾಖಲಿಸಿಕೊಳ್ಳುವ ಪದ್ದತಿಯು ಇದಿಗೂ ಅನುಷ್ಠಾನಗೊಂಡಿಲ್ಲ. ಆದರೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಂಸ್ಥೆಯ ಅಭಿಪ್ರಾಯದಂತೆ, ಭಾರತದ ಪ್ರತಿ ೨೨ ಮಹಿಳೆಯರಲ್ಲಿ ಒಬ್ಬರು ತಮ್ಮ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್ ನಿಂದ ಪೀಡಿತರಾಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಪ್ರತಿ ಎಂಟು ಮಹಿಳೆಯರಲ್ಲಿ ಒಬ್ಬಾಕೆಯು, ತನ್ನ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್ ಗೆ ಈಡಾಗುವ ಸಾಧ್ಯತೆಗಳಿವೆ.  ಮಹಿಳೆಯರ ವಯಸ್ಸು ಹೆಚ್ಚಾದಂತೆಯೇ, ಇದರ ಸಂಭಾವ್ಯತೆಯೂ ಹೆಚ್ಚುತ್ತದೆ. 

ಕಾರಣವೇನು?

ಸ್ತನಗಳ ಕ್ಯಾನ್ಸರ್ ಉದ್ಭವಿಸಲು ನಿಖರವಾದ ಹಾಗೂ ನಿರ್ದಿಷ್ಟವಾದ ಕಾರಣಗಳು ಏನೆಂದು ಹೇಳಲಾಗದು. ಆದರೆ ಈ ವ್ಯಾಧಿಯ ಸಂಭಾವ್ಯತೆಗೆ ಸಂಬಂಧಿಸಿದಂತೆ ಕೆಲವೊಂದು ಅಪಾಯಕಾರಿ ಅಂಶಗಳು ಇಂತಿವೆ. ಇವುಗಳಲ್ಲಿ ಮೇಲೆ ನಮೂದಿಸಿದಂತೆ ಲಿಂಗ ಮತ್ತು ವಯಸ್ಸು, ೧೨ ವರ್ಷ ವಯಸ್ಸಿಗೆ ಮುನ್ನ ಪುಷ್ಪವತಿಯರಾಗಿದ್ದ ಬಾಲಕಿಯರು, ೫೫ ವರ್ಷ ವಯಸ್ಸಿನ ಬಳಿಕ ಋತುಬಂಧವಾದ ಸ್ತ್ರೀಯರು, ಅವಿವಾಹಿತರು, ಸಂತಾನ ಪ್ರಾಪ್ತಿಯಾಗದವರು, ೪೦ ವರ್ಷ ವಯಸ್ಸಿನ ಬಳಿಕ ಮಕ್ಕಳನ್ನು ಹೆತ್ತವರು, ಕಂದನಿಗೆ ತನ್ನ ಮೊಲೆಹಾಲನ್ನು ಊಡಿಸದವರು, ಗರ್ಭನಿರೋಧಕ ಔಷದಗಳನ್ನು ಸೇವಿಸುತ್ತಿದ್ದ ಮತ್ತು ಸೇವಿಸುತ್ತಿರುವವರು, ಅನ್ಯ ಕಾರಣಗಳಿಗಾಗಿ ಹಾರ್ಮೋನ್ ಯುಕ್ತ ಔಷದಗಳನ್ನು ಸೇವಿಸುವ ಮಹಿಳೆಯರು ಮತ್ತು ಸ್ತನ ಕ್ಯಾನ್ಸರ್ ಪೀಡಿತರ ಸಮೀಪದ ಸಂಬಂಧಿಗಳು ಈ ವ್ಯಾಧಿಗೆ ತುತ್ತಾಗುವ ಸಾಧ್ಯತೆಗಳಿವೆ. ಇದಲ್ಲದೆ ಅನುವಂಶಿಕತೆ ಮತ್ತು ಪರಿವರ್ತಿತ ಹಾಗೂ ಅಸಾಮಾನ್ಯ ವಂಶವಾಹಿನಿಗಳ ಇರುವಿಕೆ, ಅಧಿಕ ತೂಕ ಹಾಗೂ ಅತಿ ಬೊಜ್ಜು, ಅತಿಯಾದ ಧೂಮ ಹಾಗೂ ಮದ್ಯಪಾನ ಮತ್ತು ನಿರುಪಯುಕ್ತ ಆಹಾರಗಳನ್ನು ( ಜಂಕ್ ಫುಡ್ ) ಅತಿಯಾಗಿ ಸೇವಿಸುವ ಹವ್ಯಾಸ ಇರುವವರಲ್ಲೂ, ಈ ವ್ಯಾಧಿ ತಲೆದೋರುವ ಸಾಧ್ಯತೆಗಳು ಹೆಚ್ಚಿವೆ. 

ಜಾಗತಿಕ ಮಟ್ಟದಲ್ಲಿ ವರ್ಷಂಪ್ರತಿ ೧.೩೮ ದಶಲಕ್ಷ ಸ್ತನ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ೪,೫೮,೦೦೦ ರೋಗಿಗಳು ಇದಕ್ಕೆ ಬಲಿಯಾಗುತ್ತಿದ್ದಾರೆ. ಈ ಸಮಸ್ಯೆಗೆ ಅಭಿವೃದ್ಧಿ ಹೊಂದಿರುವ, ಅಭಿವೃದ್ಧಿ ಹೊಂದುತ್ತಿರುವ ಮತ್ತು ಬಡ ದೇಶಗಳೂ ಅಪವಾದವೆನಿಸಿಲ್ಲ. ಆದರೆ ಮಧ್ಯಮ ಮತ್ತು ಅಲ್ಪ ಆದಾಯವಿರುವ ದೇಶಗಳಲ್ಲಿ ಸ್ತನ ಕ್ಯಾನ್ಸರ್ ವ್ಯಾಧಿಗೆ ಬಲಿಯಾಗುತ್ತಿರುವವರ ಪ್ರಮಾಣವು ೨,೬೯,೦೦೦ ಕ್ಕೂ ಹೆಚ್ಚಿದೆ. 

ಸ್ತನ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆಯು ವರ್ಷಂಪ್ರತಿ ನಿಧಾನವಾಗಿ ಆದರೆ ನಿಶ್ಚಿತವಾಗಿ ಹೆಚ್ಚುತ್ತಲೇ ಇದ್ದು, ಇದಕ್ಕೆ ಅನುಗುಣವಾಗಿ ವ್ಯಾಧಿಪೀಡಿತರ ಮರಣದ ಪ್ರಮಾಣವೂ ವೃದ್ಧಿಸುತ್ತಿದೆ. ಆದರೆ ಪ್ರಾರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಲ್ಲಿ ಇದನ್ನು ಗುಣಪಡಿಸುವ ಸಾಧ್ಯತೆಗಳು ಶೇ.೯೮ ರಷ್ಟಿದ್ದು, ವಿಳಂಬವಾದಲ್ಲಿ ಇದರ ಪ್ರಮಾಣವು ಕೇವಲ ಶೇ. ೨೭ ರಷ್ಟಿರುತ್ತದೆ.  

ಪ್ರಸ್ತುತ ಭಾರತದಲ್ಲಿ ಪ್ರತಿವರ್ಷ ಒಂದು ಲಕ್ಷಕ್ಕೂ ಅಧಿಕ ಸ್ತನ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಆದರೆ ಗ್ರಾಮೀಣ ಜನರ ಅಜ್ಞಾನ, ವಿದ್ಯಾವಂತರ ಲಜ್ಜೆ ಮತ್ತು ತಮ್ಮ ಶಾರೀರಿಕ ಆರೋಗ್ಯದ ಸಮಸ್ಯೆಗಳನ್ನು ನಿರ್ಲಕ್ಷಿಸುವ ಅಥವಾ ಮುಚ್ಚಿಡುವ ಹವ್ಯಾಸಗಳಿಂದಾಗಿ, ಗಣನೀಯ ಪ್ರಮಾಣದ ಪ್ರಕರಣಗಳು ವೈದ್ಯರ ಗಮನಕ್ಕೆ ಬರುವುದೇ ಇಲ್ಲ!. 

ಪ್ರಾಯಶಃ ಇಂತಹ ಕಾರಣಗಳಿಂದಾಗಿಯೇ ಬಹುತೇಕ ಮಹಿಳೆಯರು ತಮ್ಮ ಸ್ತನಗಳಲ್ಲಿ ಪುಟ್ಟ ಹುಣಸೆ ಬೀಜದಷ್ಟು ಗಾತ್ರದ ಗೆಡ್ಡೆಯೊಂದು ಇರುವುದನ್ನು ( ಪ್ರಾಥಮಿಕ ಹಂತ ) ಅರಿತರೂ, ವೈದ್ಯರನ್ನು ಸಂದರ್ಶಿಸುವುದಿಲ್ಲ. ಈ ಗೆಡ್ಡೆಯು ತುಸು ದೊಡ್ಡದಾದ ಬಳಿಕ ( ತುಸು ವೃದ್ಧಿಸಿದ ಹಂತ ) ಮತ್ತು ಇನ್ನು ಕೆಲವರು ಈ ಗೆಡ್ಡೆಯಲ್ಲಿ ತೀವ್ರ ನೋವು ಆರಂಭಗೊಂಡ ಬಳಿಕ ( ಮೂರನೇ ಹಂತ ) ವೈದ್ಯರನ್ನು ಭೇಟಿಯಾಗುತ್ತಾರೆ. ತತ್ಪರಿಣಾಮವಾಗಿ ಈ ರೋಗಿಗಳು ಸಾಕಷ್ಟು ಶಾರೀರಿಕ ಹಾಗೂ ಮಾನಸಿಕ ಯಾತನೆಗಳೊಂದಿಗೆ, ಆರ್ಥಿಕ ಸಂಕಷ್ಟಗಳಿಗೂ ಒಳಗಾಗುತ್ತಾರೆ. 

ಎಲ್ಲವೂ ಕ್ಯಾನ್ಸರ್ ಅಲ್ಲ 

ಅನೇಕ ವಿದ್ಯಾವಂತರೂ ಸ್ತನಗಳಲ್ಲಿ ಉದ್ಭವಿಸುವ ಗೆಡ್ಡೆಗಳೆಲ್ಲವೂ ಕ್ಯಾನ್ಸರ್ ಎಂದೇ ನಂಬುತ್ತಾರೆ. ಆದರೆ ನಿಜ ಹೇಳಬೇಕಿದ್ದಲ್ಲಿ, ಇವುಗಳಲ್ಲಿ ಶೇ. ೭೫ ರಷ್ಟು ಗೆಡ್ಡೆಗಳು ನಿರಪಾಯಕಾರಿಗಳೇ ಆಗಿರುತ್ತವೆ. ಆದುದರಿಂದ ಯಾವುದೇ ಕಾರಣಕ್ಕೂ ಇಂತಹ ಗೆಡ್ಡೆಗಳು ಉದ್ಭವಿಸಿದಲ್ಲಿ, ಇದನ್ನು ನಿರಪಾಯಕಾರಿ ಎಂದು ನೀವಾಗಿ ನಿರ್ಧರಿಸಿ ಮುಚ್ಚಿಡುವ ಪ್ರಯತ್ನವು " ಸೆರಗಿನಲ್ಲಿ ಕಟ್ಟಿಕೊಂಡ ಕೆಂಡ " ದಂತಾಗುವುದು ಎನ್ನುವುದನ್ನು ಮರೆಯದಿರಿ. ಈ ಮಾಹಿತಿಯನ್ನು ನಿಮ್ಮ ಬಂಧುಮಿತ್ರರೊಂದಿಗೆ ಹಂಚಿಕೊಳ್ಳುವ ಮೂಲಕ " ಗುಲಾಬಿ ಮಾಸ " ದ ಆಚರಣೆಯಲ್ಲಿ ನೀವೂ ಸಕ್ರಿಯವಾಗಿ ಪಾಲ್ಗೊಳ್ಳಿರಿ. ತನ್ಮೂಲಕ ಸ್ತನ ಕ್ಯಾನ್ಸರ್ ನ ಮಾರಕತೆಯನ್ನು ತಡೆಗಟ್ಟಲು ಸಹಕರಿಸಿ. 

ಸ್ವಯಂ ಸ್ತನ ಪರೀಕ್ಷೆ 

ಮಾರಕವೆನಿಸಬಲ್ಲ ಸ್ತನ ಕ್ಯಾನ್ಸರ್ ವ್ಯಾಧಿಯನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆಹಚ್ಚಲು ಸ್ವಯಂ ಸ್ತನ ಪರೀಕ್ಷೆಯು ಅತ್ಯಂತ ಸರಳ ಹಾಗೂ ಸುಲಭ ವಿಧಾನವೂ ಹೌದು. ಹದಿಹರೆಯದ ಹುಡುಗಿಯರಿಂದ ಆರಂಭಿಸಿ, ವಯೋವೃದ್ಧ ಮಹಿಳೆಯರ ತನಕ ಪ್ರತಿಯೊಬ್ಬರೂ ಈ ಸರಳ ವಿದಾನವನ್ನು ತಮ್ಮ ಪರಿಚಿತ ವೈದ್ಯರಿಂದ ಕೇಳಿ ತಿಳಿದುಕೊಳ್ಳಬಹುದಾಗಿದೆ. ಬಳಿಕ ಪ್ರತಿ ತಿಂಗಳಲ್ಲೂ ಸ್ವಯಂ ಸ್ತನ ಪರೀಕ್ಷೆಯನ್ನು ನಡೆಸುತ್ತಿದ್ದಲ್ಲಿ, ಅಸಾಮಾನ್ಯ ಬದಲಾವಣೆಗಳನ್ನು ಸುಲಭದಲ್ಲೇ ಪತ್ತೆಹಚ್ಚಬಹುದಾಗಿದೆ. ಜೊತೆಗೆ ಸ್ತನಗಳಲ್ಲಿ ನೋವು, ಜ್ವರ, ಸ್ತನ ಹಾಗೂ ಕಂಕುಳಿನಲ್ಲಿ ಇರುವ ಲಿಂಫ್ ಗ್ರಂಥಿಗಳಲ್ಲಿ ಬಾವು, ಸ್ತನಗಳಲ್ಲಿ ಉದ್ಭವಿಸಿರುವ ಚಿಕ್ಕಪುಟ್ಟ ಗೆಡ್ಡೆಗಳು ಅಥವಾ ಯಾವುದೇ ರೀತಿಯ ಅಸಾಮಾನ್ಯ ಬದಲಾವಣೆಗಳನ್ನು ಗಮನಿಸಿದೊಡನೆ, ತಜ್ಞ ವೈದ್ಯರನ್ನು ಸಂದರ್ಶಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಲ್ಲಿ ಅಯಾಚಿತ ಸಮಸ್ಯೆಗಳನ್ನು ನಿಶ್ಚಿತವಾಗಿ ತಡೆಗಟ್ಟಬಹುದು. 

ಅಂತಿಮವಾಗಿ ಹೇಳುವುದಾದಲ್ಲಿ ಭಾರತದಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಪ್ರಾಥಮಿಕ ಹಂತದಲ್ಲೇ ಪತ್ತೆಯಾಗುತ್ತಿರುವ ಪ್ರಮಾಣವು ಅತ್ಯಲ್ಪವಾಗಿದೆ. ಈ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಜನಜಾಗೃತಿಯನ್ನು ಮೂಡಿಸಬೇಕಾಗಿದೆ. ತನ್ಮೂಲಕ ಇದಕ್ಕೆ ಬಲಿಯಾಗುವ ರೋಗಿಗಳ ಪ್ರಮಾಣವನ್ನೂ ಕನಿಷ್ಠ ಶೇ.೩೦ ರಷ್ಟು ಕಡಿಮೆ ಮಾಡಬಹುದಾಗಿದೆ. 

ಡಾ. ಸಿ.ನಿತ್ಯಾನಂದ ಪೈ, ಪುತ್ತೂರು 













  

SWACH BHARATH SECOND ANNIVERSARY


      ಸ್ವಚ್ಛ ಭಾರತ ಅಭಿಯಾನದ ದ್ವಿತೀಯ ವಾರ್ಷಿಕೋತ್ಸವ  

ಎರಡು ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ದೇಶದ ಪ್ರಧಾನ ಜನಸೇವಕ ನರೇಂದ್ರ ಮೋದಿಯವರು ಸ್ವತಃ ಕಸವನ್ನು ಗುಡಿಸುವ ಮೂಲಕ " ಸ್ವಚ್ಛಭಾರತ ಅಭಿಯಾನ " ವನ್ನು  ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ವಾರದಲ್ಲಿ ಎರಡು ಘಂಟೆಗಳಂತೆ, ವರ್ಷದಲ್ಲಿ ೧೦೦ ಘಂಟೆಗಳನ್ನು ಸ್ವಚ್ಛತೆಗಾಗಿ ವಿನಿಯೋಗಿಸಬೇಕು ಎಂದು ವಿನಂತಿಸಿದ್ದರು. ಈ ಅಭಿಯಾನವು ಮುಂದಿನ ಐದು ವರ್ಷಗಳ ಕಾಲ ನಿರಂತರವಾಗಿ ನಡೆಯಲಿದ್ದು, ಗಾಂಧೀಜಿಯವರ ೧೫೦ ನೇ ಜನ್ಮದಿನದಂದು ಸಂಪನ್ನಗೊಳ್ಳಲಿದ್ದು, ಈ ಅವಧಿಯಲ್ಲಿ ನಮ್ಮ ದೇಶವನ್ನು  ಸ್ವಚ್ಛ, ಸ್ವಸ್ಥ ಮತ್ತು ಸುಂದರವನ್ನಾಗಿಸಲು ದೇಶದ ಪ್ರಜೆಗಳೆಲ್ಲರೂ ಶ್ರಮಿಸುವಂತೆ ಕರೆನೀಡಿದ್ದರು.

 ಈ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ದೇಶದ ಪ್ರತಿಯೊಂದು ರಾಜ್ಯಗಳ ರಾಜಕೀಯ ನೇತಾರರು, ಉನ್ನತ ಅಧಿಕಾರಿಗಳು, ಬೃಹತ್ ಉದ್ದಿಮೆ – ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು, ವಿದ್ಯಾರ್ಥಿಗಳು ಮತ್ತು ಶ್ರೀಸಾಮಾನ್ಯರು ಇದರಲ್ಲಿ ಭಾಗಿಯಾಗಿದ್ದು, ಇನ್ನುಮುಂದೆ ಪ್ರತಿ ತಿಂಗಳಿನಲ್ಲೂ ಸ್ವಚ್ಛತಾ ಕಾರ್ಯಕ್ರಮವನ್ನು ನಿಯಮಿತವಾಗಿ ನಡೆಸುವುದಾಗಿ ಘೋಷಿಸಿದ್ದರು. ಆದರೆ ಈ ಆರಂಭಶೂರತ್ವವು ಒಂದೆರಡು ತಿಂಗಳುಗಳಲ್ಲೇ ಅಂತ್ಯಗೊಂಡಿದ್ದುದು ಮಾತ್ರ ಸುಳ್ಳೇನಲ್ಲ!. ಪ್ರಾಯಶಃ ಮಾಧ್ಯಮಗಳಲ್ಲಿ ಲಭಿಸಲಿರುವ ಪುಕ್ಕಟೆ ಪ್ರಚಾರಕ್ಕಾಗಿ ಭಾಗಿಯಾಗಿದ್ದ ಇವರೆಲ್ಲರೂ, ಬಳಿಕ ಕಣ್ಮರೆಯಾಗಿದ್ದರು. ನಿಜ ಹೇಳಬೇಕಿದ್ದಲ್ಲಿ  ಕೇವಲ ಪ್ರಚಾರದ ಸಲುವಾಗಿ ಭಾಗಿಯಾಗುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ  ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗದು ಎನ್ನುವುದರಲ್ಲಿ ಎರಡು ಮಾತಿಲ್ಲ. ಅಂತೆಯೇ ದೇಶದ ಜನತೆ ಮನಸ್ಪೂರ್ವಕವಾಗಿ ಇದರಲ್ಲಿ ಭಾಗವಹಿಸಿದಲ್ಲಿ, ಇದು ಯಶಸ್ವಿಯಾಗುವುದರಲ್ಲೂ ಸಂದೇಹವಿಲ್ಲ.

ವಿಶೇಷವೆಂದರೆ ಈ ಅಭಿಯಾನ ಆರಂಭವಾಗುವ ಮುನ್ನವೇ ದೇಶದ ಅನೇಕ ಮಹಾನಗರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ " ಆಗ್ಲಿ ಇಂಡಿಯನ್ಸ್ " ನಾಮಧೇಯದ ಸೇವಾ ಸಂಘಟನೆ ಮತ್ತು ಅಭಿಯಾನ ಆರಂಭವಾದ ಬಳಿಕ ಇದರಲ್ಲಿ ಭಾಗಿಯಾಗಿದ್ದ ರಾಮಕೃಷ್ಣ ಮಿಶನ್ ಮತ್ತಿತರ ಬೆರಳೆಣಿಕೆಯಷ್ಟು ಸಂಘಟನೆಗಳು, ಇಂದಿಗೂ ಸ್ವಚ್ಛತಾ ಕಾರ್ಯಕ್ರಮವನ್ನು ನಿಯಮಿತವಾಗಿ ನಡೆಸುತ್ತಿವೆ. ತತ್ಪರಿಣಾಮವಾಗಿ ಅನೇಕ ನಗರಗಳಲ್ಲಿನ ದುರ್ವಾಸನೆಯನ್ನು ಬೀರುವ ಹಾಗೂ ಅಸಹ್ಯವೆನಿಸುವ ತ್ಯಾಜ್ಯಗಳ ರಾಶಿಗಳು ಕಣ್ಮರೆಯಾಗಿವೆ. ಜೊತೆಗೆ ಇಂತಹ ಸ್ಥಳಗಳು ಸ್ವಚ್ಚ ಮತ್ತು ಸುಂದರವಾಗಿವೆ. 

ಅಭಿಯಾನಕ್ಕೆ ಎರಡು ವರ್ಷ

ದೇಶದ ವಿವಿಧ ರಾಜ್ಯಗಳ ಮಾಹಿತಿಯನ್ನು ಪರಿಶೀಲಿಸಿದಾಗ ಈ ಅಭಿಯಾನವು ತಕ್ಕಮಟ್ಟಿಗೆ ಯಶಸ್ವಿಯಾಗಿದೆ. ಆದರೆ ಪ್ರಧಾನಿಯವರ ಅಪೇಕ್ಷೆಯಂತೆ ದೇಶದ ಪ್ರತಿಯೊಬ್ಬ ಪ್ರಜೆಯು ಇದರಲ್ಲಿ ಭಾಗವಹಿಸಿದ್ದಲ್ಲಿ, ಅಭಿಯಾನವು  ಇನ್ನಷ್ಟು ಯಶಸ್ವಿಯಾಗುತ್ತಿತ್ತು ಎನ್ನುವುದರಲ್ಲಿ ಸಂದೇಹವಿಲ್ಲ. ಅಂತೆಯೇ ಸ್ಥಳೀಯ ಸಂಸ್ಥೆಗಳು, ರಾಜ್ಯಮತ್ತು ಕೇಂದ್ರ ಸರ್ಕಾರಗಳು ತಮ್ಮ ವ್ಯಾಪ್ತಿಯಲ್ಲಿ ತ್ಯಾಜ್ಯಗಳ ಸಂಗ್ರಹ ಮಾತ್ರವಲ್ಲ, ಈ ತ್ಯಾಜ್ಯಗಳನ್ನು ಸುರಕ್ಷಿತ ಮತ್ತು ವೈಜ್ಞಾನಿಕ ವಿಧಿವಿಧಾನಗಳಿಂದ ಪುನರ್ಬಳಕೆ ಹಾಗೂ ಪುನರ್ ಆವರ್ತನಗೊಳಿಸುವ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಳಸಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವ, ಸಿಮೆಂಟ್ ಮತ್ತು ಉಕ್ಕಿನ ಕಾರ್ಖಾನೆಗಳ ಕುಲುಮೆಗಳಲ್ಲಿ ಇಂಧನವನ್ನಾಗಿ ಬಳಸುವ, ಭಗ್ನಗೊಳಿಸಿದ ಕಟ್ಟಡಗಳ ತ್ಯಾಜ್ಯಗಳಿಂದ ಹೊಸ ಕಟ್ಟಡಗಳನ್ನು ಅಥವಾ ಹೊಸ ರಸ್ತೆಗಳನ್ನು ನಿರ್ಮಿಸುವ, ತ್ಯಾಜ್ಯಗಳನ್ನು ಬಳಸಿ ವಿದ್ಯುತ್ ಉತ್ಪಾದನೆ ಮಾಡುವ ಘಟಕಗಳನ್ನು ಸ್ಥಾಪಿಸುವ, ಸಂಪೂರ್ಣವಾಗಿ ನಿರುಪಯುಕ್ತ ಎನಿಸುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಇನ್ಸಿನರೇಟರ್ ಮೂಲಕ ಸುರಕ್ಷಿತವಾಗಿ ದಹಿಸುವ ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳಿಂದ ವಾಹನಗಳಲ್ಲಿ ಬಳಸಬಹುದಾದ ಇಂಧನವನ್ನು ತಯಾರಿಸಬಲ್ಲ ಘಟಕಗಳನ್ನು ಸ್ಥಾಪಿಸಿದಲ್ಲಿ, ಕಣ್ಣು ಹಾಯಿಸಿದಲ್ಲೆಲ್ಲಾ ಕಾಣಸಿಗುವ ಮತ್ತು ಲ್ಯಾಂಡ್ ಫಿಲ್ ಸೈಟ್ ಗಳಲ್ಲಿ ತುಂಬಿ ತುಳುಕುತ್ತಿರುವ ಅಗಾಧ ಪ್ರಮಾಣದ ತ್ಯಾಜ್ಯಗಳು ಕಣ್ಮರೆಯಾಗುತ್ತಿದ್ದವು. ತತ್ಪರಿಣಾಮವಾಗಿ ಹೊಸ ಲ್ಯಾಂಡ್ ಫಿಲ್ ಸೈಟ್ ಗಳ ನಿರ್ಮಾಣಕ್ಕಾಗಿ ಸ್ಥಳವನ್ನು ಹುಡುಕುವ ಹಾಗೂ ಸ್ಥಾಪಿಸಲು ತಗಲುವ ವೆಚ್ಚಗಳನ್ನು ಮತ್ತು ಇವುಗಳ ಸ್ಥಾಪನೆಯನ್ನು ವಿರೋಧಿಸುವ ಜನರ ಪ್ರತಿಭಟನೆಗಳನ್ನು ಸುಲಭದಲ್ಲೇ ನಿವಾರಿಸಬಹುದಾಗಿತ್ತು. 

ನೀವೇನು ಮಾಡಬಹುದು

ಬಡವ ಶ್ರೀಮಂತರೆನ್ನುವ ಭೇದವಿಲ್ಲದೇ ದೇಶದ ಪ್ರಜೆಗಳೆಲ್ಲರೂ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು.ಕಾರಣಾಂತರಗಳಿಂದ ಈ ಅಭಿಯಾನದಲ್ಲಿ ಪ್ರತ್ಯಕ್ಷವಾಗಿ ಭಾಗಿಗಳಾಗಲು ಸಾಧ್ಯವಿಲ್ಲದಿದ್ದಲ್ಲಿ, ತಾವು ದಿನನಿತ್ಯ ಉತ್ಪಾದಿಸುವ ತ್ಯಾಜ್ಯಗಳ ಪ್ರಮಾಣವನ್ನು ಕಡಿಮೆ ಮಾಡುವ ಹಾಗೂ ಎಲ್ಲೆಂದರಲ್ಲಿ ತ್ಯಾಜ್ಯಗಳನ್ನು ಎಸೆಯುವ ಕೆಟ್ಟ ಹವ್ಯಾಸವನ್ನು ತೊರೆಯುವ ಮೂಲಕವೂ ಅಭಿಯಾನವನ್ನು ಯಶಸ್ವಿಗೊಳಿಸಬಹುದಾಗಿದೆ. ಅಂತೆಯೇ ಅಧಿಕತಮ ಜನರು ಅತಿಯಾಗಿ ಬಳಸುವ ಪ್ಲಾಸ್ಟಿಕ್ ಕೈಚೀಲ ಮತ್ತಿತರ " ಬಳಸಿ ಎಸೆಯುವ " ವಸ್ತುಗಳ ಬಳಕೆಯನ್ನು ಕಡಿಮೆ ಮಾಡುವ, ಪುನರ್ ಬಳಕೆ ಮಾಡುವ ಮೂಲಕ ಹಾಗೂ ನಿರುಪಯುಕ್ತ ಪ್ಲಾಸ್ಟಿಕ್ ಚೀಲಗಳನ್ನು ಪುನರ್ ಆವರ್ತನಗೊಳಿಸುವ ಸಲುವಾಗಿ ಪ್ರತ್ಯೇಕಿಸಿ ಇರಿಸುವ ಮೂಲಕ ಮತ್ತು ಪ್ಲಾಸ್ಟಿಕ್ ಚೀಲಗಳನ್ನು ನಿರಾಕರಿಸುವ ಮೂಲಕ, ಇಂತಹ ವಸ್ತುಗಳನ್ನು ತ್ಯಾಜ್ಯ ರೂಪದಲ್ಲಿ ವಿಸರ್ಜಿಸುವುದನ್ನು ಸುಲಭದಲ್ಲೇ ತಡೆಗಟ್ಟಬಹುದಾಗಿದೆ.

ವಿದ್ಯಾರ್ಥಿಗಳಿಗೊಂದು ಅವಕಾಶ

ಶಾಲಾಕಾಲೇಜು ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವುದರೊಂದಿಗೆ ಒಂದಿಷ್ಟು ಆದಾಯವನ್ನು ಗಳಿಸಬಲ್ಲ ಸುಲಭೋಪಾಯವೊಂದು ಇಂತಿದೆ. ತಮ್ಮ ಮನೆಗಳಲ್ಲಿ, ಶಾಲಾಕಾಲೇಜುಗಳ ಆವರಣಗಳಲ್ಲಿ, ತಾವು ದಿನನಿತ್ಯ ನಡೆದಾಡುವ ರಸ್ತೆಗಳ ಬದಿಗಳಲ್ಲಿ ಕಾಣಸಿಗುವ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಸ್ವಚ್ಚವಾದ ಪ್ಲಾಸ್ಟಿಕ್ ಕೈಚೀಲ ಇತ್ಯಾದಿಗಳನ್ನು ಸಂಗ್ರಹಿಸಿ, ನಿಮ್ಮದೇ ಊರಿನ ಗುಜರಿ ಅಂಗಡಿಗಳಿಗೆ ನೀಡಬಹುದಾಗಿದೆ. ಅದೇ ರೀತಿಯಲ್ಲಿ ರಟ್ಟಿನ ಪೆಟ್ಟಿಗೆಗಳು ನಿರುಪಯುಕ್ತ ಕಾಗದ ಇತ್ಯಾದಿ ವಸ್ತುಗಳನ್ನು ಒಲೆಯಲ್ಲಿ ಸುಡುವ ಬದಲಾಗಿ, ಇವುಗಳನ್ನು ಕೂಡಾ ಗುಜರಿ ಅಂಗಡಿಗಳಿಗೆ ಮಾರಬಹುದಾಗಿದೆ. ಇದರಿಂದಾಗಿ ತ್ಯಾಜ್ಯಗಳ ಉತ್ಪಾದನೆಯು ಕಡಿಮೆಯಾಗುವುದಲ್ಲದೇ, ನೀವು ಸಂಗ್ರಹಿಸಿ ಮಾರಾಟ ಮಾಡುವ ತ್ಯಾಜ್ಯಗಳ ಪ್ರಮಾಣಕ್ಕೆ ಅನುಗುಣವಾಗಿ ನಿಮಗೆ ಒಂದಿಷ್ಟು ಆದಾಯವೂ ಲಭಿಸುತ್ತದೆ. ನಮ್ಮೂರಿನ ಶಾಲೆಯೊಂದರ ವಿದ್ಯಾರ್ಥಿಗಳು ಈ ವಿಧಾನವನ್ನು ಅನುಸರಿಸುವ ಮೂಲಕ, ತಮಗೆ ಬೇಕಾಗುವ ಸ್ಲೇಟು, ಪುಸ್ತಕ, ಪೆನ್ಸಿಲ್, ಪೆನ್, ಸ್ಕೂಲ್ ಬ್ಯಾಗ್, ಕೊಡೆ ಮತ್ತಿತರ ವಸ್ತುಗಳನ್ನು ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಪಡೆಯುತ್ತಿದ್ದಾರೆ. ಈ ವಿಧಾನವನ್ನು ದೇಶದ ಎಲ್ಲ ಶಾಲಾಕಾಲೇಜುಗಳಲ್ಲಿ ಅನುಷ್ಠಾನಿಸಬಹುದಾಗಿದೆ. ತನ್ಮೂಲಕ ವಿದ್ಯಾರ್ಥಿಗಳಿಗೆ ಈ ಅಭಿಯಾನದಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸುವುದರೊಂದಿಗೆ, ಅವರ ಹೊಣೆಗಾರಿಕೆಯನ್ನು ಹೆಚ್ಚಿಸಬಹುದಾಗಿದೆ.

ಇಷ್ಟು ಮಾತ್ರವಲ್ಲ, ಮಾರುಕಟ್ಟೆ ಅಥವಾ ಸಮೀಪದ ಅಂಗಡಿಗಳಲ್ಲಿ ಯಾವುದೇ ವಸ್ತುವನ್ನು ಖರೀದಿಸಲು ಹೋಗುವಾಗ ಮರೆಯದೇ ಬಟ್ಟೆಯ ಚೀಲವೊಂದನ್ನು ಒಯ್ಯಿರಿ. ಸರಣಿ ಮಳಿಗೆಗಳಲ್ಲಿ ಖರೀದಿಸುವ ಪ್ರತಿಯೊಂದು ತರಕಾರಿ ಹಾಗೂ ಹಣ್ಣುಗಳನ್ನು ಪ್ರತ್ಯೇಕ ಪ್ಲಾಸ್ಟಿಕ್ ಚೀಲದಲ್ಲಿ ಹಾಕಲೇಬೇಕೆಂದು ಒತ್ತಾಯಿಸಿದಲ್ಲಿ ನಿರಾಕರಿಸಿ. ಇವೆಲ್ಲವುಗಳನ್ನು ತೂಕ ಮಾಡಿದ ಬಳಿಕ ಇವುಗಳ ತೂಕ ಮತ್ತು ಬೆಲೆಯನ್ನು ಸೂಚಿಸುವ  ಸ್ಟಿಕ್ಕರ್ ಗಳನ್ನು ಕೇವಲ ಒಂದು ಪ್ಲಾಸ್ಟಿಕ್ ಚೀಲಕ್ಕೆ ಅಂಟಿಸುವಂತೆ ಸೂಚಿಸಿ. ಅನಿವಾರ್ಯವಾಗಿ ಪ್ಲಾಸ್ಟಿಕ್ ಚೀಲವನ್ನು ವ್ಯಾಪಾರಿಗಳಿಂದ ಪಡೆದುಕೊಂಡಲ್ಲಿ, ಇದನ್ನು ಹಲವಾರು ಬಾರಿ ಪುನರ್ಬಳಸಿ. ಯಾವುದೇ ಸಂದರ್ಭದಲ್ಲೂ ನಿಮ್ಮ ಮನೆಯಲ್ಲಿ ಉತ್ಪನ್ನವಾಗುವ ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಸಲುವಾಗಿಯೇ ಪ್ಲಾಸ್ಟಿಕ್ ಕೈಚೀಲಗಳನ್ನು ಕೇಳಿ ಪಡೆಯದಿರಿ!.

ಪ್ರಧಾನ ಮಂತ್ರಿಯವರು ಅಪೇಕ್ಷಿಸಿದಂತೆ ಕನಿಷ್ಠ ನೀವು ದಿನನಿತ್ಯ ಉತ್ಪಾದಿಸುತ್ತಿರುವ ತ್ಯಾಜ್ಯಗಳ ಪ್ರಮಾಣವನ್ನು ಕಡಿಮೆಮಾಡಿ.ಉತ್ಪಾದಿಸಿರುವ ತ್ಯಾಜ್ಯಗಳನ್ನು ಪ್ರತ್ಯೇಕಿಸಿ, ಹಸಿ ತ್ಯಾಜ್ಯಗಳನ್ನು ನಿಮ್ಮ ಆವರಣದಲ್ಲಿರುವ ಮರಗಿಡಗಳ ಬುಡದಲ್ಲಿ ಹಾಕಿರಿ. ಗುಜರಿ ಅಂಗಡಿಗೆ ನೀಡಲು ಆಸಾಧ್ಯವೆನಿಸುವ ಹಾಗೂ ತೀರಾ ನಿರುಪಯುಕ್ತ ಮತ್ತು ಪುನರ್ ಆವರ್ತನಗೊಳಿಸಲಾಗದ ತ್ಯಾಜ್ಯಗಳನ್ನು ಮಾತ್ರ ನಿಮ್ಮ ವಸತಿ – ವಾಣಿಜ್ಯ ಕಟ್ಟಡಗಳಿಂದ ತ್ಯಾಜ್ಯ ಸಂಗ್ರಹಿಸುವ ಕಾರ್ಯಕರ್ತರಿಗೆ ನೀಡಿ. ನಿಮ್ಮೂರಿನ ಸ್ಥಳೀಯ ಸಂಸ್ಥೆಯು ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ನಿರ್ವಹಿಸಲು ವಿಧಿಸುವ ಶುಲ್ಕವನ್ನು ತಪ್ಪದೆ ಪಾವತಿಸಿ. ಈ ಶುಲ್ಕವನ್ನು ಉಳಿಸುವ ಸಲುವಾಗಿ ತ್ಯಾಜ್ಯಗಳನ್ನು ರಸ್ತೆಬದಿ ಅಥವಾ ಚರಂಡಿಗಳಲ್ಲಿ ಎಸೆಯದಿರಿ. ನಿಮ್ಮ ನೆರೆಕರೆಯ ನಿವಾಸಿಗಳಿಗೂ ಇದೇ ರೀತಿಯಲ್ಲಿ ಸಹಕರಿಸಲು ಪ್ರೇರೇಪಿಸಿ.

ಅಭಿಯಾನದ ಪ್ರಗತಿ 

ಸರ್ಕಾರಿ ಅಂಕಿ ಅಂಶಗಳಂತೆ ಸ್ವಚ್ಛ ಭಾರತ ಅಭಿಯಾನದಲ್ಲಿ ಗಣನೀಯ ಪ್ರಮಾಣದ ಪ್ರಗತಿ ಕಂಡುಬರುತ್ತದೆ. ಈ ಅಭಿಯಾನದಲ್ಲಿ ಬಯಲು ಶೌಚಮುಕ್ತ ಭಾರತ, ಸಾರ್ವಜನಿಕ ಶೌಚಾಲಯಗಳ ನಿರ್ಮಾಣವೆ ಮುಂತಾದ ಅನ್ಯ ಯೋಜನೆಗಳನ್ನು ಸೇರಿಸಿದ್ದು, ಇವೆಲ್ಲವನ್ನೂ ಒಂದಾಗಿ ಪರಿಗಣಿಸಿರುವುದು ಇದಕ್ಕೆ ಕಾರಣವೆನಿಸುತ್ತದೆ. ಆದರೆ ದೇಶದ ಮೂಲೆಮೂಲೆಗಳಲ್ಲಿ ಇಂದಿಗೂ ಕಾಣಸಿಗುವ ತ್ಯಾಜ್ಯಗಳ ರಾಶಿಗಳನ್ನು ಕಂಡಾಗ, ಅಭಿಯಾನದ ಯಶಸ್ಸಿನ ಬಗ್ಗೆ ಸಂದೇಹವೂ ಮೂಡುತ್ತದೆ. ಕಣ್ಣು ಹಾಯಿಸಿದಲ್ಲೆಲ್ಲಾ ಕಾಣಸಿಗುವ ತ್ಯಾಜ್ಯಗಳ ಸಮಸ್ಯೆ ಬಗೆಹರಿಯಬೇಕಿದ್ದಲ್ಲಿ, ದೇಶದ ಪ್ರತ್ಯೊಬ್ಬ ಪ್ರಜೆಯ ಸಹಕಾರ ಅತ್ಯವಶ್ಯಕ ಎನಿಸುತ್ತದೆ. ಆದುದರಿಂದ ಮುಂದಿನ ಮೂರು ವರ್ಷಗಳಲ್ಲಿ ಈ ಅಭಿಯಾನವು ಅಪೇಕ್ಷಿತ ಫಲಿತಾಂಶವನ್ನು ನೀಡಬೇಕಿದ್ದಲ್ಲಿ, ನಾವುನೀವೆಲ್ಲರೂ ಒಂದಾಗಿ ಇದರ ಯಶಸ್ಸಿಗಾಗಿ ಶ್ರಮಿಸಲೇಬೇಕು. 

ಕೊನೆಯ ಮಾತು

ಆರೋಗ್ಯವೇ ಭಾಗ್ಯ ಎನ್ನುವ ಮುತ್ತಿನಂತಹ ಮಾತುಗಳನ್ನು ನೀವು ಕೇಳಿರಲೇಬೇಕು. ಸ್ವಚ್ಛತೆ ಮತ್ತು ನಮ್ಮ ಆರೋಗ್ಯಕ್ಕೆ ಅವಿನಾಭಾವ ಸಂಬಂಧವಿದೆ. ಸಾಮಾನ್ಯವಾಗಿ ಸ್ವಚ್ಛತೆ ಇರುವಲ್ಲಿ ವ್ಯಾಧಿಗಳ ಬಾಧೆ ಇರುವ ಸಾಧ್ಯತೆಗಳಿಲ್ಲ. ಆದರೆ ಅಸ್ವಚ್ಛ ಪರಿಸರದಲ್ಲಿ ಕಾಯಿಲೆಗಳ ಹಾವಳಿ ಸ್ವಾಭಾವಿಕವಾಗಿಯೇ ಹೆಚ್ಚಾಗಿರುತ್ತದೆ. ಆದುದರಿಂದ ನಿಮ್ಮ ಮನೆ, ಸುತ್ತಲಿನ ಆವರಣ, ಸಮೀಪದ ರಸ್ತೆ, ನಿಮ್ಮ ಕೇರಿ ಮತ್ತು ಊರಿನ ಸ್ವಚ್ಛತೆಯನ್ನು ಕಾಪಾಡುವುದರೊಂದಿಗೆ, ನಮ್ಮ ದೇಶವನ್ನು ಸ್ವಚ್ಛ, ಸ್ವಸ್ಥ ಮತ್ತು ಸುಂದರ ಭಾರತವನ್ನಾಗಿಸಿ.

ಡಾ.ಸಿ.ನಿತ್ಯಾನಂದ ಪೈ, ಪುತ್ತೂರು